– ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ
– ಮುಂದಿನ ಅವಧಿಗೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ
ಹಾಸನ: ಮುಂದಿನ ಅವಧಿಯ 21 ತಿಂಗಳು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರದ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟಪಡಿಸಿದರು.
ನಗರದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರದಲ್ಲಿ ಇರಲಿದ್ದಾರೆ. ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗೆ ಎಲ್ಲರೂ ಸಹಕಾರ ನೀಡಲಿದ್ದು, ಮುಂದಿನ ಅವಧಿಗೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹುತಾತ್ಮ ಸೋನಿಯಾ ಗಾಂಧಿ – ಭಾಷಣ ವೇಳೆ ಡಿಕೆಶಿ ಯಡವಟ್ಟು
ಶಾಸಕ ಪ್ರೀತಂ ಗೌಡ ಹಾಗೂ ಸೋಮಣ್ಣ ನಡುವಿನ ವಾಕ್ಸಮರ ಮುಗಿದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಆರ್, ಅಶೋಕ್ ಅವರು ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿದ್ದಾರೆ. ಇದೀಗ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದರು. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಬಗ್ಗೆ ದೇಶ ಹಾಗೂ ರಾಜ್ಯ ರಾಜಕೀಯದಲ್ಲಿ ಅಪಾರ ಗೌರವವಿದೆ. ಮುಖ್ಯಮಂತ್ರಿಗಳು ಅವರ ಮನೆಗೆ ಹೋಗಬೇಕು ಬೇಡವೋ ಎಂಬುದು ಅವರ ಪರಮಾಧಿಕಾರ ಈ ಬಗ್ಗೆ ಪ್ರಶ್ನೆ ಮಾಡುವ ಯಾವುದೇ ಹಕ್ಕು ಯಾರಿಗೂ ಇಲ್ಲ. ಜೆಡಿಎಸ್ನವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಹೋಗಬಾರದು ಎಂಬುದು ಪ್ರೀತಮ್ ಗೌಡ ಅವರ ವೈಯಕ್ತಿಕ ಹೇಳಿಕೆಯಾಗಿದೆ. ದೇವೇಗೌಡರ ಮನೆಗೆ ಹೋಗುವುದು ಅವರಿಗೆ ಕೊಡುವಂತಹ ಗೌರವವಾಗಿದೆ. ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು . ಇದನ್ನೂ ಓದಿ: ಶಿವನಗೌಡ ನಾಯಕ್ಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ನೋವಾಗಿದೆ: ವಿ.ಸೋಮಣ್ಣ
ನಮ್ಮಲ್ಲಿ ಯಾವುದೇ ಮಿತ್ರಮಂಡಳಿ ಇಲ್ಲ. ನಾವು ಬಿಜೆಪಿ ಪಕ್ಷದ ಶಾಸಕರಾಗಿ ಸರ್ಕಾರದೊಂದಿಗೆ ಸಹಕಾರ ನೀಡಲಿದ್ದೇವೆ. ಯಾವುದೇ ಕೆಲಸ ಕೊಟ್ಟರು ನೋಡಿಕೊಂಡು ಹೋಗುವುದೇ ನಮ್ಮ ಮುಖ್ಯ ಧ್ಯೇಯವಾಗಿದೆ. ಜವಾಹರ್ ಲಾಲ್ ನೆಹರೂ ಹಾಗೂ ಇಂದಿರಾ ಕ್ಯಾಂಟೀನ್ ಬಗ್ಗೆ ಸಿಟಿ ರವಿ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸಿಟಿ ರವಿ ಅವರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಅವರು ಮಾತನಾಡುವ ವೇಳೆ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಿರುತ್ತಾರೆ ಎಂದು ಸಮರ್ಥನೆ ಮಾಡಿಕೊಂಡರು. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಕೇವಲ ಮಾಧ್ಯಮಗಳಲ್ಲಿ ಈ ಬಗ್ಗೆ ತಿಳಿದುಕೊಂಡಿದ್ದೇವೆ ಎಂದು ಸಚಿವರು ತಿಳಿಸಿದರು.
ಬಸವರಾಜ ಬೊಮ್ಮಾಯಿ ಅವರು ಅಧಿಕಾರಕ್ಕೆ ಬಂದ ನಂತರ ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲರ ವೇತನದಲ್ಲಿ ಹೆಚ್ಚಳ ಮಾಡಲಾಗಿದೆ. ಇದರಿಂದ ಲಕ್ಷಾಂತರ ಮಂದಿ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 272 ಕೋಟಿ ರೂಪಾಯಿ ಹಾನಿ ಸಂಭವಿಸಿದೆ. ಎನ್.ಡಿ.ಆರ್.ಎಫ್ ನಿಂದ 50 ಕೋಟಿ ರೂ ಬಿಡುಗಡೆಗೆ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಹಂತಹಂತವಾಗಿ ಪರಿಹಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಭವಿಷ್ಯದಲ್ಲಿ ನಂಬಿಕೆ ಇಲ್ಲ ಅಂತಾರೆ,ಭವಿಷ್ಯ ಹೇಳಲು ಶುರು ಮಾಡಿದ್ದಾರೆ- ಸಿದ್ದರಾಮಯ್ಯ ವಿರುದ್ಧ ಬಿ.ಸಿ.ಪಾಟೀಲ್ ಕಿಡಿ
ಮುಂದಿನ ವಾರದಲ್ಲಿ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಬಗ್ಗೆ ಸಭೆ ಕರೆದು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆಗಸ್ಟ್ 17ರಂದು ಶೋಭಾಕರಂದ್ಲಾಜೆ ಹಾಸನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ, ಅವರೊಂದಿಗೆ ಚರ್ಚಿಸಿ ಜಿಲ್ಲೆಯಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ ಹಾಗೂ ಆನೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಲಾಗುವುದು ಹಾಗೂ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದರು.
ಇನ್ನೆರಡು ದಿನದಲ್ಲಿ ಶಿರಾಡಿಘಾಟ್ ರಸ್ತೆ ಸಂಚಾರ ಮುಕ್ತವಾಗಲಿದೆ. ಈಗಾಗಲೇ ಕಾಮಗಾರಿ ಮುಗಿದಿದ್ದು ಸುಗಮ ಸಂಚಾರಕ್ಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮಳೆ ನಿಂತ ನಂತರ ಹಾಸನದಿಂದ ಸಕಲೇಶಪುರ ವರೆಗಿನ ರಸ್ತೆಗೆ ದುರಸ್ತಿ ಹಾಗೂ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಎಂಜಿನಿಯರ್ಗಳು ತಿಳಿಸಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಲಾಗಿದೆ. ನೂತನ ಬಸ್ ನಿಲ್ದಾಣ ಸಂಪರ್ಕ, ರೈಲ್ವೆ ಮೇಲ್ಸೇತುವೆ ನಿರ್ಮಾಣ ಸಂಬಂಧ ಶೀಘ್ರವಾಗಿ ಕಾಮಗಾರಿ ಮುಗಿಸುವಂತೆ ಮುಂದಿನ ವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ಮಾಡಲಾಗುವುದು ಎಂದು ಸಚಿವರು ಇದೇ ವೇಳೆ ತಿಳಿಸಿದರು. ಇದನ್ನೂ ಓದಿ: ಮೇಕೆದಾಟು, ಮಹದಾಯಿ ಯೋಜನೆ ಪ್ರಾರಂಭಿಸುತ್ತೇವೆ: ಸಿಎಂ ಬೊಮ್ಮಾಯಿ
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ ಪರಮೇಶ್ ಸೇರಿದಂತೆ ಇತರರು ಹಾಜರಿದ್ದರು.