ಬೆಳಗಾವಿ: ಬುಲೆರೋ ಮತ್ತು ಟಾಟಾ ಏಸ್ ನಡುವೆ ಡಿಕ್ಕಿಯಾದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸವದತ್ತಿ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಟಾಟಾ ಏಸ್ ಚಾಲಕ ಮತ್ತು ಆರು ಮಹಿಳೆಯರು ಸೇರಿ ಒಟ್ಟು ಏಳು ಮಂದಿ ಸಾನ್ನಪ್ಪಿದ್ದಾರೆ. ಮೃತರೆಲ್ಲರೂ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಟಾಟಾ ಏಸ್ನಲ್ಲಿ ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಹೋಗುತ್ತಿದ್ದರು. ಇತ್ತ ಸವದತ್ತಿಯಿಂದ ಧಾರವಾಡಕ್ಕೆ ಬುಲೆರೋ ತೆರಳುತ್ತಿತ್ತು. ಈ ವೇಳೆ ಸವದತ್ತಿ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಬುಲೆರೋ ವಾಹನಕ್ಕೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಆರು ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಗಾಯಗೊಂಡವರನ್ನು ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.