ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ (67) ಕೋವಿಡ್ ನಿಂದಾಗಿ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಮೂರು ದಿನಗಳ ಹಿಂದೆ ತೀವ್ರ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಮಾಜಿ ಶಾಸಕರು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಕೊರೊನಾವನ್ನು ಲೆಕ್ಕಿಸದೇ ಆಸ್ಪತ್ರೆ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅವರ ಅನುಯಾಯಿಗಳು ಜಮಾಯಿಸಿದ್ದರು. ನಂತರ ಮಧ್ಯರಾತ್ರಿ 2 ಗಂಟೆಗೆ ಪಾರ್ಥಿವ ಶರೀರವನ್ನು ಭದ್ರಾವತಿಯ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಮಾಜಿ ಶಾಸಕರ ಪಾರ್ಥಿವ ಶರೀರ ತಮ್ಮ ನಿವಾಸಕ್ಕೆ ತೆರಳುತ್ತಿದ್ದಂತೆ ನಿವಾಸದ ಬಳಿಯಲ್ಲಿಯೂ ಅಂತಿಮ ದರ್ಶನ ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ವಿಐಎಸ್ ಎಲ್ ನೌಕರರಾಗಿ ಜೀವನ ಆರಂಭಿಸಿದ್ದ ಅವರು ಕಾರ್ಮಿಕ ನಾಯಕರಾಗಿ ಬೆಳೆದು ನಂತರ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. 1994 ಹಾಗೂ 1999 ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಸತತ ಸೋಲು ಅನುಭವಿಸಿದ ಅವರು 2013ರಲ್ಲಿ ಜೆಡಿಎಸ್ ಸೇರ್ಪಡೆಯಾಗಿ, ಜೆಡಿಎಸ್ ನಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. ಹೀಗೆ ಮೃತ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರು ಭದ್ರಾವತಿ ಕ್ಷೇತ್ರದಿಂದ ಒಟ್ಟು 3 ಬಾರಿ ಶಾಸಕರಾಗಿದ್ದರು. ಮಾಜಿ ಶಾಸಕರ ನಿಧನದ ಸುದ್ದಿ ಕೇಳಿ ಇಡೀ ಭದ್ರಾವತಿ ಕ್ಷೇತ್ರದ ಜನತೆ ಶೋಕ ಸಾಗರದಲ್ಲಿ ಮುಳುಗಿದೆ.