ಮನ್ಸೂರ್‌ ಖಾನ್‌ ಒತ್ತಡ – ರೋಷನ್‌ ಬೇಗ್‌ ಅರೆಸ್ಟ್‌, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್

Public TV
2 Min Read
ima mansoor khan roshan baig

ಬೆಂಗಳೂರು: ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್‌ ಖಾನ್‌ ಒತ್ತಡದಿಂದಾಗಿ ಸಿಬಿಐ ಇಂದು ಮಾಜಿ ಮಂತ್ರಿ, ಶಿವಾಜಿ ನಗರದ ಮಾಜಿ ಶಾಸಕ ರೋಷನ್‌ ಬೇಗ್‌ ಅವರನ್ನು ಬಂಧಿಸಿದೆ.

ರೋಷನ್‌ ಬೇಗ್‌ ಅವರನ್ನು ಬಂಧಿಸಿದ ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ರೋಷನ್‌ ಬೇಗ್‌ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ.

mansoor khan 1

ಬಂಧನ ಯಾಕೆ?
ಈ ಹಿಂದೆ ಸಿಬಿಐ ಎರಡು ಬಾರಿ ನೋಟಿಸ್‌ ನೀಡಿ ರೋಷನ್‌ ಬೇಗ್‌ ಅವರನ್ನು ವಿಚಾರಣೆ ನಡೆಸಿತ್ತು. ಬಳಿಕ ಯಾವುದೇ ವಿಚಾರಣೆ ನಡೆಸಿರಲಿಲ್ಲ.

ಈ ನಡುವೆ ಮನ್ಸೂರ್‌ ಖಾನ್‌ ನಾನು ರೋಷನ್‌ ಬೇಗ್‌ ಅವರಿಗೆ ಹಣ ನೀಡಿದ್ದೇನೆ. ಈ ಹಣವನ್ನು ರೋಷನ್‌ ಬೇಗ್‌ ಅವರಿಂದ ಪಡೆಯಲೇಬೇಕು ಎಂದು ಹೇಳಿದ್ದಾನೆ. ಒಂದು ವೇಳೆ ಹಣವನ್ನು ಪಡೆಯದೇ ಇದ್ದರೆ ನಿಮ್ಮ ವಿರುದ್ಧವೇ ನ್ಯಾಯಾಧೀಶರಿಗೆ ದೂರು ನೀಡುತ್ತೇನೆ ಎಂದು ಮನ್ಸೂರ್‌ ಖಾನ್‌  ಸಿಬಿಐ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

IMA Mansoor khan 1

ರೋಷನ್‌ ಬೇಗ್‌ ಅವರಿಗೆ ಮನ್ಸೂರ್‌ ಖಾನ್‌ 200 ಕೋಟಿ ಸೇರಿದಂತೆ ಐಷಾರಾಮಿ ಕಾರು, ಉಡುಗೊರೆ ನೀಡಿದ್ದ ಆರೋಪ ಈ ಪ್ರಕರಣ ಬೆಳಕಿಗೆ ಬಂದಾಗಲೇ ಬಂದಿತ್ತು. ಆದರೆ ಈಗ ಮನ್ಸೂರ್‌ ಖಾನ್‌ ಒತ್ತಡ ಹಾಕಿದ್ದ ಕಾರಣ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಮನೆಗೆ ತೆರಳಿ ರೋಷನ್‌ ಬೇಗ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ  ಸಂಜೆಯ ವೇಳೆ ಬಂಧಿಸಿದೆ. ಇದನ್ನೂ ಓದಿ: ಐಎಂಎ ವಂಚನೆಗೆ ಸ್ಫೋಟಕ ತಿರುವು- ಮನ್ಸೂರ್‌ನನ್ನು ಸಚಿವ್ರ ಬಳಿ ಕರ್ಕೊಂಡು ಹೋಗಿದ್ದ ಬೇಗ್

IMA Mansoor Khan a copy

ಗ್ರಾಹಕರಿಗೆ ವಂಚನೆ ಹೇಗೆ?
ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷಕ್ಕೆ 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.

ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ 2019ರ ಏಪ್ರಿಲ್, ಮೇ ತಿಂಗಳಿನಲ್ಲಿ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *