ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ನಂದಿಗ್ರಾಮದಲ್ಲಿ ದೀದಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಮತಾ ಬ್ಯಾನರ್ಜಿ ನಾಮಪತ್ರ ಸಲ್ಲಿಸುವಾಗ ಅಫಿಡವಿತ್ನಲ್ಲಿ ತನ್ನ ಮೇಲಿರುವ 6 ಕ್ರಿಮಿನಲ್ ಪ್ರಕರಣಗಳನ್ನು ಬಹಿರಂಗಗೊಳಿಸಿಲ್ಲ. ಹೀಗಾಗಿ ನಾಮಪತ್ರವನ್ನು ತಿರಸ್ಕರಿಸುವಂತೆ ಆಯೋಗದ ಮೆಟ್ಟಿಲು ಏರಿದ್ದಾರೆ.
ಅಸ್ಸಾಂನಲ್ಲಿ ಐದು ಮತ್ತು ಪಶ್ಚಿಮ ಬಂಗಾಳದಲ್ಲಿ ಸಿಬಿಐ ದಾಖಲಿಸಿರುವ ಒಂದು ಪ್ರಕರಣವನ್ನು ಮುಚ್ಚಿಟ್ಟು ನಾಮಪತ್ರ ಸಲ್ಲಿಕೆಯಾಗಿದೆ ಎಂದು ಸುವೇಂದು ಅಧಿಕಾರಿ ದೂರಿನಲ್ಲಿ ಆರೋಪಿಸಿದ್ದಾರೆ.
ತನ್ನ ವಿರುದ್ಧ ದಾಖಲಾಗಿದ್ದ ಒಂದು ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಕೋರ್ಟ್ ಮಮತಾ ಅರ್ಜಿಯನ್ನು ತಿರಸ್ಕರಿಸಿದೆ. ನಾನು ಎಲ್ಲ ಮಾಹಿತಿಯನ್ನು ಕ್ರೋಢಿಕರಿಸಿ ಚುನಾವಣಾ ಆಯೋಗಕ್ಕೆ ನೀಡಿದ್ದೇನೆ. ನಾನು ನೀಡಿದ ದಾಖಲೆಗಳ ಆಧಾರದ ಮೇಲೆ ಚುನಾವಣಾ ಆಯೋಗ ಮಮತಾ ಬ್ಯಾನರ್ಜಿ ಅವರ ನಾಮಪತ್ರ ಪರಿಶೀಲಿಸಲಿ.ಕಾನೂನು ಪ್ರಕಾರ ಈ ಪ್ರಕರಣದಲ್ಲಿ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ಒಂದು ವೇಳೆ ನ್ಯಾಯ ಸಿಗದೇ ಇದ್ದಲ್ಲಿ ನಾನು ಮುಂದಿನ ಹಂತಕ್ಕೆ ಈ ಪ್ರಕರಣವನ್ನು ತೆಗೆದುಕೊಂಡು ಹೋಗುತ್ತೇನೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.
2016ರ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸುವೇಂದು ಅಧಿಕಾರಿ ಜಯಗಳಿಸಿದ್ದರು. ಆದರೆ ಈ ಬಾರಿ ಸುವೇಂದು ಅಧಿಕಾರಿಯನ್ನು ಸೋಲಿಸಲೆಂದೇ ಮಮತಾ ಬ್ಯಾನರ್ಜಿ ಈ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.