– 3 ವರ್ಷದಿಂದ ಹೊಳೆಗೆ ತಡೆಗೋಡೆ ನಿರ್ಮಿಸಿಲ್ಲ
ಹಾಸನ: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. ಆದರೂ ಕಾವೇರಿ ನದಿಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿರುವುದರಿಂದ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಹೊಳೆ ದಂಡೆಯ ಮನೆಗಳು, ತೋಟಗಳು ಸಂಪೂರ್ಣ ಜಲಾವೃತವಾಗಿದ್ದು, ಸ್ಥಳೀಯರು ಆತಂಕ ಹೊರಹಾಕುತ್ತಿದ್ದಾರೆ.
ಕಳೆದ ನಾಲ್ಕೈದು ದಿನದಿಂದ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಕಳೆದ ಮೂರು ವರ್ಷದಿಂದ ಇದೇ ಪರಿಸ್ಥಿತಿ ಪುನರಾವರ್ತನೆ ಆಗುತ್ತಿದೆ. ಜೀವನ ನಡೆಸೋದು ಹೇಗೆ ಎಂಬ ಆತಂಕ ಶುರುವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ನಮ್ಮನ್ನು ಬೇರೆಡೆ ಸ್ಥಳಾಂತರ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ನಾವು ಎಲ್ಲಿಗೂ ಹೋಗಲು ತಯಾರಿಲ್ಲ. ಅದರ ಬದಲು ನದಿಗೆ ಶಾಶ್ವತವಾಗಿ ಒಂದು ತಡೆಗೋಡೆ ನಿರ್ಮಿಸಿದರೆ ನಮ್ಮ ಮನೆಗಳಿಗೆ ನೀರು ನುಗ್ಗುವುದು ತಪ್ಪುತ್ತದೆ. ಕಳೆದ ಮೂರು ವರ್ಷದಿಂದ ಜನಪ್ರತಿನಿಧಿಗಳು ತಡೆಗೋಡೆ ನಿರ್ಮಿಸುವ ಭರವಸೆ ನೀಡುತ್ತಲೇ ಇದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ.
ಶನಿವಾರವಷ್ಟೇ ಸಚಿವ ಗೋಪಾಲಯ್ಯ, ಶಾಸಕರಾದ ಎಟಿ.ರಾಮಸ್ವಾಮಿ ಇಲ್ಲಿಗೆ ಬಂದು ಪುನಃ ತಡೆಗೋಡೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದಾರೆ. ಆದರೆ ಈ ಬಾರಿಯೂ ತಡೆಗೋಡೆ ನಿರ್ಮಾಣ ಕೇವಲ ಭರವಸೆಗಷ್ಟೇ ಸೀಮಿತವಾದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡುತ್ತಿದ್ದಾರೆ ಸ್ಥಳೀಯರು.