ಬೆಂಗಳೂರು: ಮಹದೇವಪುರ ವಲಯದ ವಿವಿಧ ಭಾಗಗಳಲ್ಲಿ ಕೋವಿಡ್ ಕೇರ್ ಸೆಂಟರ್ ಮತ್ತು ಟ್ರಯಾಜಿಂಗ್ ಕೇಂದ್ರಗಳನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಕೋವಿಡ್ ಸೋಂಕಿತರು ಪಾಸಿಟಿವ್ ಬಂದಿದ್ದರೂ ಹೊರಗೆ ತಿರುಗಾಡುತ್ತಿರುವುದು ಗಮನಕ್ಕೆ ಬಂದಿದೆ. ಸೋಂಕಿತರು ಮನೆಯೊಳಗೆ ಇರಬೇಕು, ಹೊರಗೆ ತಿರುಗುವುದರಿಂದ ಇತರರಿಗೂ ಸೋಂಕು ಹಬ್ಬುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಹೊರಗೆ ಸುತ್ತುತ್ತಿರುವ ಸೋಂಕಿತರನ್ನು ಪತ್ತೆ ಮಾಡಲು ಪೊಲೀಸರ ನೆರವು ಪಡೆಯಲಾಗುವುದು ಎಂದು ತಿಳಿಸಿದರು.
ಒಂದೇ ಶೌಚಾಲಯ ಇರುವ ಮನೆಗಳಲ್ಲಿ ಸೋಂಕಿತರು ಹೋಮ್ ಐಸೋಲೇಷನ್ ನಲ್ಲಿ ಇರುವುದು ಕಷ್ಟ, ಅಂತಹವರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಸೋಂಕಿತರು ಟ್ರೈಯಾಜಿಂಗ್ ಕೇಂದ್ರಕ್ಕೆ ಬಂದ ನಂತರ ಪರಿಶೀಲನೆ ಮಾಡಿ, ವೈದ್ಯಕೀಯ ಚಿಕಿತ್ಸೆಗೆ ಅನುಗುಣವಾಗಿ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗುವುದು ಎಂದರು.
ಮೊದಲು ಹಾಲನಾಯಕನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕೋವಿಡ್ ವಾರ್ ರೂಮ್ ಉದ್ಘಾಟನೆ ಮಾಡಲಾಯಿತು, ನಂತರ ಹಾಡೋಸಿದ್ದಾಪುರದ ಐವಿರೋಜ್ ರೆಸಾರ್, ಟ್ರೈಯಾಜ್ ಸೆಂಟರ್ ಹಾಗೂ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಯಿತು. ಮಂಡೂರು ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕೋವಿಡ್ ವಾರ್ ರೂಮ್, ಬಿದರಹಳ್ಳಿ ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಹತ್ತಿರ ಟ್ರೈಯಾಜ್ ಸೆಂಟರ್ ಹಾಗೂ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಲಾಯಿತು.