ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ನೌಕರ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ತಾಳ ಬೆಟ್ಟದಲ್ಲಿ ನಡೆದಿದೆ.
ಮಹದೇವ ಪ್ರಸಾದ್ (28) ಮೃತ ವ್ಯಕ್ತಿ. ರಸ್ತೆಯಲ್ಲಿ ಬೈಕ್ ಮೇಲೆ ಮಲಗಿರುವ ರೀತಿಯಲ್ಲಿ ಪ್ರಸಾದ್ ಮೃತದೇಹ ಪತ್ತೆಯಾಗಿದೆ. ಹೀಗಾಗಿ ಮಹದೇವ ಪ್ರಸಾದ್ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಮಹದೇವ್ ಪ್ರಸಾದ್ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಂಪ್ ಹೌಸ್ನಲ್ಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಪತ್ನಿಯ ಊರಿಗೆ ತೆರಳಿ ವಾಪಸ್ ಬರುವಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಕುರಿತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.