ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಯುಗಾದಿ ಆಚರಿಸಲಾಯಿತು.
ಇಂದು ಬೆಳಗ್ಗಿನ ಜಾವ 3 ರಿಂದ 6 ಗಂಟೆಯವರೆಗೆ ಮಹದೇಶ್ವರನಿಗೆ ವಿಶೇಷ ಪೂಜೆ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ರಥೋತ್ಸವ ರದ್ದಾದ ಕಾರಣ ಉಮಾ ಮಹೇಶ್ವರ ಉತ್ಸವ ಮೂರ್ತಿಗೆ ಅಭಿಷೇಕ ಮಾಡಿ ಮಹಾರಥಕ್ಕೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಲಾಯಿತು. ನಂತರ ದೇವಾಲಯದ ಆವರಣದಲ್ಲಿ ಬಿಳಿ ಆನೆಯ ಉತ್ಸವ, ಹುಲಿವಾಹನ, ಬಸವವಾಹನ ಹಾಗೂ ರುದ್ರಾಕ್ಷಿ ಉತ್ಸವಗಳನ್ನು ಸರಳವಾಗಿ ನೆರವೇರಿಸಲಾಯಿತು.
ಅರ್ಚಕರು, ದೇವಾಲಯದ ಸಿಬ್ಬಂದಿ ಹಾಗು ಸ್ಥಳೀಯರು ಮಾತ್ರ ಪಾಲ್ಗೊಂಡಿದ್ದರು. ಪ್ರತಿ ವರ್ಷ ಲಕ್ಷಾಂತರ ಭಕ್ತರು ಯುಗಾದಿ ಹಬ್ಬದಂದು ಮಾದಪ್ಪನ ದರ್ಶನ ಪಡೆಯುತ್ತಿದ್ದರು. ಯುಗಾದಿ ಹಬ್ಬದಂದು ಮಹಾರಥೋತ್ಸವ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ರಥೋತ್ಸವ ರದ್ದು ಪಡಿಸಲಾಗಿದ್ದು, ಹೊರಗಿನ ಭಕ್ತರಿಗೆ ಬೆಟ್ಟಕ್ಕೆ ಪ್ರವೇಶ ನಿಷೇಧ ಹೇರಲಾಗಿತ್ತು.