ಗದಗ: ಜಿಲ್ಲೆಯಲ್ಲಿ 2 ದಿನ ಲಾಕ್ಡೌನ್ ಸಡಿಲಿಕೆ ಇರುವುದರಿಂದ ಅನೇಕ ಕಡೆಗಳಲ್ಲಿ ಬೀಜ, ಗೊಬ್ಬರ ಖರೀದಿಗಾಗಿ ರೈತರು ಮುಗಿಬಿದ್ದಿದ್ದಾರೆ.
ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇದರಿಂದ ಗದಗ, ಲಕ್ಷ್ಮೇಶ್ವರ, ಗಜೇಂದ್ರಗಡ ಪಟ್ಟಣಗಳಲ್ಲಿ ಬೀಜ, ಗೊಬ್ಬರ ಖರೀದಿ ವೇಳೆ ಮಾಸ್ಕ್, ಸಾಮಾಜಿಕ ಅಂತರ ಮರೆತು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ರೈತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ನಂತರ ರೈತರು ಸರದಿ ಸಾಲಿನಲ್ಲಿ ನಿಂತು ರಸಗೊಬ್ಬರ ಪಡೆದರು. ಇದನ್ನೂ ಓದಿ: ಅನಾಥ ವೃದ್ಧೆಗೆ ತುತ್ತು ತಿನ್ನಿಸಿದ ಪೊಲೀಸ್ ಕಾರ್ಯಕ್ಕೆ ಭಾರೀ ಮೆಚ್ಚುಗೆ
ರಾಜ್ಯಕ್ಕೆ ಜೂನ್ 2ನೇ ವಾರದಲ್ಲಿ ಮುಂಗಾರು ಪ್ರವೇಶ ಮಾಡಲಿದ್ದು, ಮಳೆಯ ನಿರೀಕ್ಷೆ ಹಿನ್ನೆಲೆ ರೈತರು ಬೀಜ, ಗೊಬ್ಬರವನ್ನು ಖರೀದಿಸುತ್ತಿದ್ದಾರೆ. ಅದರಲ್ಲೂ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ವಿಧಿಸಲಾಗಿದ್ದು, ವಾರದಲ್ಲಿ 2 ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ರೈತರು ತಂಡೋಪತಂಡವಾಗಿ ಆಗಮಿಸಿ ಬೀಜ, ಗೊಬ್ಬರ ಖರೀದಿಸುತ್ತಿದ್ದಾರೆ.