ಚಿಕ್ಕೋಡಿ(ಬೆಳಗಾವಿ): ಮುಂಬರುವ ವಿಧಾನಸಭಾ ಚುನಾವಣೆಯನ್ನೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇನಡೆಸಬೇಕು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಚರ್ಚೆ ವಿಚಾರವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದರು.
ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವಾಗಿ ಮಾತನಾಡಿದ ಅವರು, ವಿಜಯೇಂದ್ರ ಯುವನಾಯಕರು, ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ವಿಜಯೇಂದ್ರ ಅವರ ಮೇಲೆ ಬಂದಿರುವ ಆರೋಪಗಳು ಎಲ್ಲ ಸುಳ್ಳು. ಆರೋಪ ಮಾಡುವವರು ದಾಖಲೆಗಳಿದ್ದರೆ ಬಹಿರಂಗಪಡಿಸಲಿ. ವಿರೋಧಿಗಳು ಹತಾಶೆಯಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು.
ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ ಮಾತನಾಡುತ್ತಾ ಲಾಠಿ ಚಾರ್ಜ್ ಕುರಿತು ಮಾತನಾಡಿದ ಅವರು, ಘಟನೆ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಇಲ್ಲ. ಈ ಬಗ್ಗೆ ಡಿಸಿ, ಎಸ್ ಪಿ ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳುತ್ತೆವೆ. ಕಾನೂನು ರೀತಿ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ. ರಾಯಣ್ಣ ಅಭಿಮಾನಿಗಳ ಮೇಲೆ ಚಪ್ಪಲಿ ಎಸೆದಿದ್ದು ಸುಳ್ಳು, ಏಳೆಂಟು ಜನರ ಗುಂಪು ಬಂದಿತ್ತು ಲಾಠಿ ಚಾರ್ಜ್ ಮಾಡಲಾಗಿದೆ. ಸದ್ಯ ಪೀರನವಾಡಿಯಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ ಎಂದರು.
ಪೀರನವಾಡಿಯಲ್ಲಿ ಇಷ್ಟೆಲ್ಲ ಗಲಾಟೆಯಿದ್ದರೂ ನಾನು ಇಂದು ಪೀರನವಾಡಿಗೆ ಭೇಟಿ ನೀಡುವುದಿಲ್ಲ. ಸಂಗೊಳ್ಳಿ ರಾಯಣ್ಣ, ಶಿವಾಜಿ ದೇಶದ ಆಸ್ತಿ ಅವರು ಜಾತಿಗೆ ಸಿಮೀತ ಮಾಡುವುದಿಲ್ಲ. ಅವರಿಗೆ ಯಾವುದೇ ಅಪಮಾನ ಆಗದಂತೆ ಸಮಸ್ಯೆಯನ್ನ ಸರಿಪಡಿಸುತ್ತೆವೆ ಎಂದರು.
ಪೀರನವಾಡಿ ಗಲಾಟೆ ಆದರೂ ಜಿಲ್ಲಾ ಉಸ್ತುವಾರಿ ಸಚಿವ ಸರ್ಕಾರಿ ವಾಹನ ಬಿಟ್ಟು ಕಾರ್ಯಕರ್ತರನ್ನ ಭೇಟಿ ಮಾಡುತ್ತಿದ್ದಾರೆ. ಚಿಕ್ಕೋಡಿ ಭಾಗದಲ್ಲಿ ಕಾರ್ಯಕರ್ತರನ್ನ ಭೇಟಿ ಆಗುವುದರಲ್ಲಿ ಬ್ಯುಸಿ ಆಗಿದ್ದರು.