ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನ ದರ್ಶನಕ್ಕೆ ಮೂರು ದಿನಗಳ ಕಾಲ ನಿರ್ಬಂದ ಹೇರಲಾಗಿದೆ.
ಶ್ರಾವಣ ಮಾಸದ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ಮೂರು ದಿನಗಳಕಾಲ ಮುದ್ದು ಮಾದಪ್ಪನ ದರ್ಶನ ಬಂದ್ ಮಾಡಲಾಗಿದೆ. ಹೀಗಾಗಿ ಜುಲೈ 19, 20 ಹಾಗೂ 21ರಂದು ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶವಿಲ್ಲ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ.ಆರ್ ರವಿ ಆದೇಶ ಹೊರಡಿಸಿದ್ದಾರೆ.
ಶ್ರಾವಣ ಮಾಸದ ಅಮಾವಾಸ್ಯೆ ಎಣ್ಣೆ ಮಜ್ಜನ ಸೇವೆ ಹಿನ್ನಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಯಿಂದ ಭಕ್ತಾದಿಗಳ ದಂಡೇ ಹರಿದು ಬರುವ ಸಾಧ್ಯತೆ ಇದೆ. ಹೀಗಾಗಿ ಮುನ್ನೆಚ್ಚರಿಕೆಯಾಗಿ ಕೋವಿಡ್ 19 ಭೀತಿಯಿಂದ ಮಲೆ ಮಹದೇಶ್ವರ ದರ್ಶನ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿಂದೆ ಬೆಟ್ಟವನ್ನು ಬಂದ್ ಮಾಡುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ದಿನನಿತ್ಯ ಸಾವಿರಾರು ಜನರು ಮಲೆ ಮಹದೇಶ್ವರಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟವನ್ನು ತಾತ್ಕಾಲಿಕವಾಗಿ ಬಂದ್ ಮಾಡಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು.
ದಿನೇ ದಿನೇ ರಾಜ್ಯದಲ್ಲಿ ಮತ್ತು ತಮಿಳುನಾಡಿನಲ್ಲಿ ಕೊರೊನಾ ಪ್ರಕರಣ ಜಾಸ್ತಿಯಾಗುತ್ತಿದೆ. ಈ ಮಧ್ಯೆ ರಾಜ್ಯದ ವಿವಿಧ ಭಾಗಗಳಿಂದ ಬೆಟ್ಟಕ್ಕೆ ಭಕ್ತರು ಬರುತ್ತಿದ್ದಾರೆ. ಬೆಟ್ಟದಲ್ಲಿ ಕೇವಲ ದೇವಾಲಯಕ್ಕೆ ಪ್ರವೇಶ ಮಾಡುವಾಗ ಮಾತ್ರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದರು.