ಮೇಕೆದಾಟು ಯೋಜನೆ ಬಗ್ಗೆ ಸಿಎಂ ನಿಲುವು ಸ್ಪಷ್ಟಪಡಿಸಬೇಕು: ಸಿದ್ದರಾಮಯ್ಯ

Public TV
3 Min Read
SIDDARAMAIAH

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಬೇಕು. ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ? ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

c t RAVI 1

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ.ರವಿ ಅವರಂತಹ ಕೂಗುಮಾರಿಗಳ ಬಾಯಿ ಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವು ನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು. ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಪ್ರಾಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ ಎಂದರು.

ನೆಲ, ಜಲ, ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು ಎಂದರು.

BOMMAI 2

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು. ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದು ಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ ಎಂದರು.

mekedatu 2

ಕೆ.ಆರ್.ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ. ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ನೆರೆ ರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಕಣಿವೆ ರಾಜ್ಯಗಳ ಅನುಮತಿ ಅಗತ್ಯ – ಕೇಂದ್ರದ ಉತ್ತರಕ್ಕೆ ಪ್ರಜ್ವಲ್ ಕೆಂಡಾಮಂಡಲ

ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ. ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ. ತಮಿಳುನಾಡು ಸರ್ಕಾರ ಕೂಡಾ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಠ ಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದೂ ಅವರು ಇದೇ ವೇಳೆ ಎಚ್ಚರಿಸಿದರು. ಇದನ್ನೂ ಓದಿ: ಮೇಕೆದಾಟು ವಿಚಾರ – ಉಪವಾಸ ಸತ್ಯಾಗ್ರಹ ಮಾಡ್ತೀವಿ ಎಂದಿರೋ ಅಣ್ಣಾಮಲೈಗೆ ಬೊಮ್ಮಾಯಿ ತಿರುಗೇಟು

Share This Article
Leave a Comment

Leave a Reply

Your email address will not be published. Required fields are marked *