– ಕಾಂಗ್ರೆಸ್ ನದ್ದು ಪಲಾಯನ ಸಂಸ್ಕೃತಿ
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಹಲವು ಅಭಿವೃದ್ಧಿ ಯೋಜನೆ ಜಾರಿಗೊಳಿಸಿದ್ದಾರೆ. ಆದರೆ ಈ ಯೋಜನೆಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ ಎನ್ನುವ ಕಾರಣಕ್ಕೆ ಬಿಜೆಪಿಯೇತರ ಪಕ್ಷಗಳು ವಿರೋಧ ಮಾಡುತ್ತಿವೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದ ಮಾಂಗಲ್ಯ ಕಲ್ಯಾಣ ಮಂದಿರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ನೂತನ ಕೃಷಿ ಕಾಯ್ದೆ ಸತ್ಯ – ಮಿಥ್ಯ ವಿಚಾರ ಸಂಚಿರಣ ಉದ್ಘಾಟಿಸಿ ಮಾತನಾಡಿದ ಸಚಿವರು, ಕೃಷಿ ಕಾಯ್ದೆ ಜಾರಿಗೊಳಿಸಿದ ನಂತರ ಕಾಯ್ದೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಪ್ರಯತ್ನವನ್ನು ಬಿಜೆಪಿಯೇತರ ಪಕ್ಷಗಳು ಮಾಡಲಿಲ್ಲ. ಬಿಜೆಪಿ ಸರ್ಕಾರ ಜಾರಿಗೆ ತಂದಿದೆ ಎನ್ನುವ ಕಾರಣಕ್ಕೆ ಬಿಜೆಪಿಯೇತರ ಪಕ್ಷಗಳು ವಿರೋಧ ಮಾಡುತ್ತಿವೆ. ನಾವು ಏನೇ ಮಾಡಿದರೂ ಅದನ್ನು ವಿರೋಧ ಮಾಡುವ ಸಲುವಾಗಿಯೇ ದೊಡ್ಡ ಗುಂಪು ಇದೆ. ಹೀಗಾಗಿಯೇ ನಮ್ಮ ಕಾರ್ಯಕರ್ತರು ಸಹ ನೂತನ ಕಾಯ್ದೆಯನ್ನು ಅಧ್ಯಯನ ಮಾಡಬೇಕು. ಆಗ ಮಾತ್ರ ವಿರೋಧಿಗಳಿಗೆ ಉತ್ತರ ಕೊಡಲು ಸಾಧ್ಯ ಎಂದರು.
ಮೋದಿ ದೇಶದ ಪ್ರಧಾನಿ ಆದ ನಂತರ ರಾಷ್ಟ್ರದಲ್ಲಿ ಅಭಿವೃದ್ಧಿ ಕೆಲಸಗಳು ಸ್ವಾಭಾವಿಕವಾಗಿ ಆಗುತ್ತಿವೆ. ಎಂದೂ ಕಾಣದ ರಸ್ತೆಗಳು, ವಿಮಾನ ನಿಲ್ದಾಣ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ವಿದೇಶಗಳು ಮೆಚ್ಚುವ ರೀತಿಯಲ್ಲಿ ಮೋದಿಯವರು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಎಂದು ತಿಳಿಸಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಸಂದರ್ಭದಲ್ಲಿ ಕಾಂಗ್ರೆಸ್ ನವರು ವಿರೋಧ ಮಾಡಿದರು. ಆದರೆ ಈಗ ಅವರು ರಾಮ ಮಂದಿರ ನಿರ್ಮಾಣ ಬೇಡ ಅನ್ನುತ್ತಿಲ್ಲ. ಬದಲಿಗೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಹಣದ ಲೆಕ್ಕ ಕೊಡಿ ಎನ್ನುತ್ತಾರೆ. ಈ ಮೂಲಕ ಕಾಂಗ್ರೆಸ್ ಒಂದು ರೀತಿಯ ಪಲಾಯನ ಅನುಸರಿಸುತ್ತಿದೆ ಎಂದರು.
ಪ್ರಾರಂಭದಲ್ಲಿ ಯೋಗವನ್ನು ವಿರೋಧ ಮಾಡಿದರು. ಯೋಗ ಏಕೆ ಬೇಕು ಎಂದು ಪ್ರಶ್ನೆ ಮಾಡಿದರು. ಆದರೆ ಅಂದು ಯೋಗವನ್ನು ವಿರೋಧ ಮಾಡಿದವರು ಇಂದು ಯೋಗ ಕಲಿಯುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ಮೋದಿ ಅವರು ಕೋವಿಡ್ ವ್ಯಾಕ್ಸಿನೇಷನ್ ಜಾರಿಗೆ ತಂದರು. ಆ ಸಂದರ್ಭದಲ್ಲಿ ಎಲ್ಲ ಕಾಂಗ್ರೆಸ್ ನಾಯಕರು ವ್ಯಾಕ್ಸಿನೇಷನ್ ಗೆ ವಿರೋಧ ಮಾಡುವ ಜೊತೆಗೆ ಅಪಪ್ರಚಾರ ಸಹ ಮಾಡಿದರು. ಆದರೆ ಇದಕ್ಕೆ ಜಗ್ಗದ ಮೋದಿ ಸರ್ಕಾರ ಲಸಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿತು. ನಂತರ ವಿರೋಧ ಮಾಡಿದವರು ಸಹ ಇದೀಗ ಲಸಿಕೆ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದಾರೆ ಎಂದರು.