ಭುವನೇಶ್ವರ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕುಸುಂಬಿ ಗ್ರಾಮದ ಆರೋಪಿಯನ್ನು ಉತ್ತರ ಪ್ರದೇಶದ ಪೊಲೀಸರ ತಂಡ ಬಂಧಿಸಿದೆ. ಆರೋಪಿಯ ವಿರುದ್ಧ ಸದ್ಯ ಸೆಕ್ಷನ್ 124 ಎ (ದೇಶದ್ರೋಹ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಯ ವಿರುದ್ಧ ಉತ್ತರದ ಸಿಂಘಾಬಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ನಿರಂತರ ಪೋಸ್ಟ್ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಲಾಗಿತ್ತು.
ಒಡಿಶಾ ಪೊಲೀಸರ ಸಹಕಾರದಲ್ಲಿ ಸದ್ಯ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಒಡಿಶಾದ ಸಾಲಿಪುರದಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದಾನೆ ಎನ್ನಲಾಗಿದೆ. ಈ ವ್ಯಕ್ತಿಯನ್ನು ಟ್ರಾನ್ಸಿಟ್ ರಿಮಾಂಡ್ಗೆ ಕರೆದೊಯ್ಯಲು ಯುಪಿ ಪೊಲೀಸ್ ತಂಡ ಚಿಂತಿಸಿದೆ.