ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಆಡಳಿತದ ಅನುಭವವನ್ನು ಬಿಜೆಪಿ ಪಕ್ಷ ಬಳಸಿಕೊಳ್ಳಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮಾರ್ಗದರ್ಶನ ಪಡೆಯಲಿದ್ದೇವೆ. ಯಡಿಯುಋಪ್ಪ ಅವರು 2 ವರ್ಷ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡಿದ್ದಾರೆ. ತಮ್ಮ ಆಡಳಿತಾವಧಿಯಲ್ಲಿ ಒಳ್ಳೆಯ ಕೆಲಸಗಳನ್ನು ಕೂಡ ಮಾಡಿದ್ದಾರೆ ಎಂದರು.
ಇಷ್ಟು ಮಾತ್ರವಲ್ಲದೆ ಯಡಿಯೂರಪ್ಪ ಅವರಿಗೆ ಪಕ್ಷ ಸಂಘಟನೆ ಹಾಗೂ ಸರ್ಕಾರದಲ್ಲಿ ಸಾಕಷ್ಟು ಅನುಭವವಿದೆ. – ಎಲ್ಲಾ ವರ್ಗಕ್ಕಾಗಿ ಬಿಎಸ್ವೈ ದುಡಿದ್ದಾರೆ. ಮುಂದೆ ಅವರ ಮಾರ್ಗದರ್ಶನದಲ್ಲಿಯೇ ಬಿಜೆಪಿ ಮುಂದುವರಿಯಲಿದೆ. ಒಟ್ಟಿನಲ್ಲಿ ಅವರ ಅನುಭವಗಳನ್ನು ಮುಂದೆ ಪಕ್ಷ ಬಳಸಿಕೊಳ್ಳಲಿದೆ ಎಂದು ಹೇಳಿದರು.
ಯಡಿಯೂರಪ್ಪ ಸಿಎಂ ಅವಧಿಯಲ್ಲಿ ಮಾಡಿದ ಕಾರ್ಯ ಶ್ಲಾಘಿಸಿದ ಅರುಣ್ ಸಿಂಗ್, ಇನ್ನು ಕೂಡ ಪಕ್ಷಕ್ಕೆ ಯಡಿಯೂರಪ್ಪ ಸಲಹೆ ನಿರಂತರವಾಗಿರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: 20 ತಿಂಗಳಾದ್ರೂ ಜಾರಿಗೆ ಬರದ ಸಿಎಎ – ಇನ್ನೂ 6 ತಿಂಗಳು ಸಮಯ ಕೇಳಿದ ಕೇಂದ್ರ
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಎಲ್ಲವನ್ನೂ ರಾಷ್ಟ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಲು ನಿರಾಕರಿಸಿದರು.
ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ಆಯ್ಕೆ ಮಾಡುತ್ತಾರೆ. ಎರಡು ಮೂರು ದಿನಗಳಲ್ಲಿ ಎಲ್ಲವೂ ಅಂತಿಮ ಆಗಲಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ ಮುಂದಿನ ಮುಖ್ಯಮಂತ್ರಿ ಯಾರಾಗಬಹುದೆಂಬ ಕುತೂಹಲ ಮತ್ತು ಚರ್ಚೆ ಆರಂಭವಾಗಿದೆ. ಈ ನಡುವೆ ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ಹಾಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೆಸರು ಸಹ ಕೇಳಿ ಬಂದಿದೆ.