– ಜಿಲ್ಲಾಡಳಿತ ಭವನ ಸೀಲ್ಡೌನ್
ಯಾದಗಿರಿ: ಕಿಲ್ಲರ್ ಕೊರೊನಾದಿಂದ ಈಗಾಗಲೇ ದೇವಸ್ಥಾನ, ಮಾಲ್, ಚಿತ್ರಮಂದಿರ ಪ್ರವಾಸಿ ಸ್ಥಳಗಳನ್ನು ಮುಚ್ಚಿಸಿದೆ. ಇದೀಗ ಯಾದಗಿರಿ ಜಿಲ್ಲಾಡಳಿತ ಭವನದ ಬಾಗಿಲು ಸಹ ಮುಚ್ಚಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯ 20ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ಇರೋದು ಬೆಳಕಿಗೆ ಬಂದಿದೆ. ಇದರಲ್ಲಿ ಜಿಲ್ಲಾಧಿಕಾರಿ ಗನ್ಮ್ಯಾನ್ ಮತ್ತು ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಇದರಿಂದ ಇಡೀ ಜಿಲ್ಲಾಡಳಿತ ಭವನಕ್ಕೆ ಆತಂಕ ಎದುರಾಗಿದೆ.
ಹೀಗಾಗಿ ಇಂದಿನಿಂದ ಮೂರು ದಿನಗಳವರೆಗೆ ಜಿಲ್ಲಾಡಳಿತ ಭವನವನ್ನು ಸೀಲ್ಡೌನ್ ಮಾಡಲಾಗಿದೆ. ಭವನದ ಸುತ್ತಮುತ್ತಲಿನ 500 ಮೀಟರ್ ಪ್ರದೇಶವನ್ನು ಬಫರ್ ಝೋನ್ ಮಾಡಲಾಗಿದ್ದು, ಭವನಕ್ಕೆ ನಗರಸಭೆಯಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ.
ಸೋಂಕಿನ ಆತಂಕದ ಮಧ್ಯೆ ಯಾದಗಿರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಚುನಾವಣೆ ಸಹ ನಡೆಯುತ್ತಿದೆ. ಹೀಗಾಗಿ ಪಂಚಾಯಿತಿ ಆವರಣದಲ್ಲಿ ಸದಸ್ಯರು ಮತ್ತು ಚುನಾವಣಾ ಅಧಿಕಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕೊರೊನಾ ಆತಂಕದ ನಡುವೆ ಇಂದು ಜಿಪಂ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ ಸೇರಿದಂತೆ ಆಯಾ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.