ಬೆಂಗಳೂರು: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿರುವ ಘಟನೆ ಬೆಂಗಳೂರಿನ ಆರ್.ಆರ್.ಕೆ ಕಲ್ಯಾಣಮಂಟಪದ ಬಳಿ ನಡೆದಿದೆ.
ದಿನೇಶ್ ಗುಂಡೇಟು ತಿಂದ ಆರೋಪಿ. ಶ್ರೀರಾಮಪುರ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ದಿನೇಶ್ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದನು. ಕಳೆದ ಎರಡು ದಿನದಿಂದ ತಲೆ ಮರಿಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ ಆರೋಪಿಯನ್ನ ಬಂಧಿಸಲು ಪೊಲೀಸರು ಹೋಗಿದ್ದರು. ಈ ವೇಳೆ ಆರೋಪಿ ದಿನೇಶ್ ಎಎಸ್ಐ ಮೇಲೆ ಹಲ್ಲೆ ಮಾಡಿದ್ದನು. ಆಗ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಸದ್ಯಕ್ಕೆ ಹಲ್ಲೆಗೊಳಗಾದ ಎಎಸ್ಐ ಮತ್ತು ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.