ಹುಬ್ಬಳ್ಳಿ: ಕೊರೊನಾ ವೈರಸ್ ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನಲೆ ಮುಸ್ಲಿಂ ಬಾಂಧವರ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಬಾರದು ಎಂದು ಶ್ರೀರಾಮ ಸೇನಾ ಮುಖಂಡರು ತಹಶಿಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಚಿಂತಾಜನಕ ಸಂಗತಿಯಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಸಾಮೂಹಿಕ ಪ್ರಾರ್ಥನೆ, ಸಭೆ ಸಮಾರಂಭ ನಡೆಸದಂತೆ ದೇವಸ್ಥಾನ, ಚರ್ಚ್, ಮಸೀದಿ ಬಂದ್ ಮಾಡಿಸಿದೆ. ಈ ಹಿನ್ನೆಲೆಯಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ಸಹ ಯಾವುದೇ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸದೇ ಸಾರ್ವಜನಿಕ ಹಿತಾಸಕ್ತಿ ಕಾಪಾಡಬೇಕು ಎಂದು ಆಗ್ರಹಿಸಿದರು.
ಈ ಹಿಂದೆ ಮುಸ್ಲಿಂ ಸಮುದಾಯದವರು ರಂಜಾನ್ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದರು. ಇದೀಗ ಶ್ರೀರಾಮ ಸೇನಾದಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸಬಾರದು ಎಂದು ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ರಾಜು ಗಾಡಗೋಳಿ, ಅಣ್ಣಪ್ಪ ದಿವಟಿಗಿ, ಮಂಜು ಕಾಟಕರ, ಸಿದ್ದು ರಾಯನಾಳ, ಅಭಿಷೇಕ ಕಾಂಬಳೆ ಸೇರಿದಂತೆ ಇತರರು ಇದ್ದರು.