ಹೈದರಾಬಾದ್: ಟಿಕ್ಟಾಕ್ ಮೂಲಕ ಖ್ಯಾತಿ ಪಡೆದುಕೊಂಡಿದ್ದ ಗಾಯಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಗಂಗಾಪುರ ಗ್ರಾಮದ ನಿವಾಸಿ ರಾಜು ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಯುವಕ ಗಡ್ಡಮ್ ರಾಜು ಎಂದೇ ಖ್ಯಾತಿ ಪಡೆದುಕೊಂಡಿದ್ದನು. ಆದರೆ ಇಂದು ಬೆಳಗ್ಗೆ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಮೃತ ರಾಜು ಟಿಕ್ಟಾಕ್ನಲ್ಲಿ ರಕ್ಷಾ ಬಂಧನದ ಹಬ್ಬಕ್ಕೆ ಸಂಬಂಧಿಸಿದ ಹಾಡಿನ ಮೂಲಕ ಗುರುತಿಸಿಕೊಂಡಿದ್ದನು. ನಂತರ ಟಿಕ್ಟಾಕ್ನಲ್ಲಿ ಅನೇಕ ಹಾಡುಗಳನ್ನು ಹಾಡುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದುಕೊಂಡಿದ್ದನು. ಆದರೆ ದುರದೃಷ್ಟಕರ ಸಂಗತಿ ಎಂದರೆ ರಾಜು ರಕ್ಷಾ ಬಂಧನದ ಹಬ್ಬಕ್ಕೂ ಮುನ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಳೆ ಅಂದರೆ ಸೋಮವಾರ ರಾಖಿ ಹಬ್ಬವಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಆದರೆ ರಾಜು ಆತ್ಮಹತ್ಯೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಮಗನನ್ನು ಕಳೆದುಕೊಂಡು ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ.
ಸದ್ಯಕ್ಕೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಎಂದು ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ರಾಜು ಕುಟುಂವದವರು ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.