ರಾಂಚಿ: ಅನಾರೋಗ್ಯದಿಂದ ಬಳಲುತಿದ್ರೂ ರಜೆ ನೀಡಿಲ್ಲ ಎಂದು ಆರೋಪಿಸಿ ಬ್ಯಾಂಕ್ ನೌಕರರೊಬ್ಬರು ಆಕ್ಸಿಜನ್ ಸಿಲಿಂಡರ್ ಸಹಿತ ಕೆಲಸಕ್ಕೆ ಹಾಜರಾಗಿದ್ದಾರೆ. ಜಾರ್ಖಂಡ್ ನ ಬೊಕೊರಾದ ಸೆಕ್ಟರ್ 4ರಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಈ ಘಟನೆ ನಡೆದಿದೆ.
ಅರವಿಂದ್ ಕುಮಾರ್ ಆಕ್ಸಿಜನ್ ಸಿಲಿಂಡರ್ ಜೊತೆಯಲ್ಲಿ ಬ್ಯಾಂಕಿಗೆ ಬಂದ ನೌಕರ. ಕೆಲ ದಿನಗಳ ಹಿಂದೆ ಅರವಿಂದ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ವರದಿ ನೆಗಟಿವ್ ಬಂದಿದ್ರೂ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಆಕ್ಸಿಜನ್ ಸಪೋರ್ಟ್ ಮೇಲಿದ್ದರು. ಉಸಿರಾಟದ ಸಮಸ್ಯೆ ಜೊತೆಗೆ ಶ್ವಾಸಕೋಶದಲ್ಲಿ ಸೋಂಕು ತಗುಲಿದ್ದರಿಂದ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ರು.
ಅನಾರೋಗ್ಯದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ರಜೆ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ಆದ್ರೂ ಕೆಲಸಕ್ಕೆ ಹಾಜರಾಗುವಂತೆ ಒತ್ತಡ ಹಾಕಲಾಗ್ತಿದೆ. ಆದ್ದರಿಂದ ಆಕ್ಸಿಜನ್ ಸಿಲಿಂಡರ್ ಜೊತೆಯಲ್ಲಿಯೇ ಕೆಲಸಕ್ಕೆ ಬರುವಂತಾಗಿದೆ ಎಂದು ಅರವಿಂದ್ ಕುಮಾರ್ ಹೇಳಿದ್ದಾರೆ.
ಅರವಿಂದ್ ಕುಮಾರ್ ರಾಜೀನಾಮೆ ನೀಡಿದ್ರೂ ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎನ್ನಲಾಗುತ್ತಿದೆ. ಇಂದು ಅರವಿಂದ್ ಜೊತೆ ಅವರ ಕುಟುಂಬಸ್ಥರು ಸಹ ಬ್ಯಾಂಕಿಗೆ ಆಗಮಿಸಿದ್ದರು. ಇತ್ತ ಬ್ಯಾಂಕ್ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.