ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಹೆಸರಿನಲ್ಲಿ 2,000 ಕೋಟಿ ಹಗರಣ ಮಾಡಿದೆ ಎಂದು ವಿಪಕ್ಷದ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಸದ್ಯ ಈ ಆರೋಪವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಿದ್ಧತೆ ನಡೆಸಿದ್ದಾರೆ.
ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಖರೀದಿಸಲಾದ ವೈದ್ಯಕೀಯ ಉಪಕರಣ ಮತ್ತು ಔಷಧಿ ಖರೀದಿ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿ 5 ದಿನ ಕಳೆದರೂ ಸರ್ಕಾರ ಅದಕ್ಕೆ ಸೂಕ್ತ ಉತ್ತರ ನೀಡಿಲ್ಲ. ದಾಖಲೆಗಳನ್ನು ಬಹಿರಂಗಪಡಿಸಿಲ್ಲ. ನ್ಯಾಯಾಂಗ ತನಿಖೆಯ ಬಗ್ಗೆ ಉಸಿರೆತ್ತುತ್ತಿಲ್ಲ. ಹೀಗಾಗಿ ಬಿಜೆಪಿ ಸರ್ಕಾರದ ಕೊರೊನಾ ಹಗರಣ ಕುರಿತು ರಾಜ್ಯಪಾಲರಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ.
ಇಂದು ರಾಜಭವನಕ್ಕೆ ತೆರಳಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ರಾಜ್ಯಪಾಲರಿಗೆ ದಾಖಲೆ ಸಹಿತ ದೂರು ನೀಡಲಿದೆ. ಜೊತೆಗೆ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರದ ನಡೆ ಖಂಡಿಸಿ ರಾಜಭವನದ ಮುಂದೆ ಇಂದು ಮಧ್ಯಾಹ್ನ 2 ಗಂಟೆಗೆ ರಾಜ್ಯ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.