ನವದೆಹಲಿ: ರಾಜಸ್ಥಾನ ಕಾಂಗ್ರೆಸ್ ಸರ್ಕಾರದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಸಚಿನ್ ಪೈಲಟ್ ನೇತೃತ್ವದ ಬಣ ಸರ್ಕಾರ ಮತ್ತು ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಖಾಲಿ ಇರುವ 9 ಸಚಿವ ಸ್ಥಾನಗಳನ್ನು ತಮ್ಮ ಬೆಂಬಲಿಗ ಶಾಸಕರಿಗೆ ನೀಡಬೇಕು ಎಂಬ ಸಚಿನ್ ಪೈಲಟ್ ಬೇಡಿಕೆಗೆ ಇನ್ನೂ ಹೈಕಮಾಂಡ್ ನಾಯಕರಿಂದ ಯಾವುದೇ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಿಲ್ಲ. ಇದನ್ನೂ ಓದಿ: ರಾಹುಲ್ ಆಪ್ತ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆ
ಪೈಲಟ್ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿದ್ದು ಭಿನ್ನಮತವನ್ನು ಶಮನ ಮಾಡುವ ನಿಟ್ಟಿನಲ್ಲಿ ಶೀಘ್ರವೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಬಿಕ್ಕಟ್ಟನ್ನು ಪರಿಹರಿಸಲು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಮುಂದೆ ನಿಂತಿದ್ದಾರೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ಕೆಲ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಪೈಲಟ್ ಬಣದ 5 ಮಂದಿ ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಯಿದೆ.
ಸಿಎಂ ಅಶೋಕ್ ಗೆಹ್ಲೋಟ್ ಸಂಪುಟದಲ್ಲಿ 9 ಸ್ಥಾನ ಖಾಲಿಯಿದೆ. ಈ ಸ್ಥಾನದ ಮೇಲೆ ಬಿಎಸ್ಪಿಯಿಂದ ಕಾಂಗ್ರೆಸ್ಗೆ ಬಂದ ಶಾಸಕರು ಕಣ್ಣಿಟ್ಟಿದ್ದಾರೆ. ಹೀಗಾಗಿ ಸಮಸ್ಯೆ ಜಟಿಲವಾಗಿದ್ದು ಗೆಹ್ಲೋಟ್ ಈ ಶಾಸಕರ ಜೊತೆಗೂ ಸಭೆ ನಡೆಸುತ್ತಿದ್ದಾರೆ.
ನಮ್ಮ ಶಾಸಕರ ಫೋನ್ಗಳನ್ನು ಕದ್ದಾಲಿಕಗೆ ಮಾಡಲಾಗುತ್ತಿದೆ ಎಂದು ಪೈಲಟ್ ಬಣದ ಶಾಸಕ ಸೋಲಂಕಿ ಗಂಭೀರವಾದ ಆರೋಪ ಮಾಡಿದ್ದಾರೆ. ಈ ನಡುವೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಚಿನ್ ಪೈಲಟ್ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷವೇ ಸಚಿನ್ ಪೈಲಟ್ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಕೊನೆಗೆ ಹೈಕಮಾಂಡ್ ಮಧ್ಯಪ್ರವೇಶಿಸಿ ಸಚಿನ್ ಪೈಲಟ್ ಅವರನ್ನು ಸಮಾಧಾನಪಡಿಸಿತ್ತು. ಈಗ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ಜಿತಿನ್ ಪ್ರಸಾದ ಅವರು ಬಿಜೆಪಿ ಸೇರಿದ ಬೆನ್ನಲ್ಲೇ ಸಚಿನ್ ಪೈಲಟ್ ಸಹ ಬಿಜೆಪಿ ಸೇರುವ ಸಾಧ್ಯತೆಯಿದೆ ಎಂಬ ವದಂತಿಗಳು ಹರಿದಾಡುತ್ತಿವೆ.