ಕೋಲ್ಕತಾ: ಅಂಫಾನ್ ಚಂಡಮಾರುತದ ಪರಿಹಾರ ಕಾರ್ಯಗಳ ಹಿನ್ನೆಲೆ ಮೇ 26ವರೆಗೂ ರಾಜ್ಯಕ್ಕೆ ಶ್ರಮಿಕ್ ರೈಲುಗಳನ್ನು ಕಳುಹಿಸದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಅಂಫಾನ್ ಚಂಡಮಾರುತದಿಂದ ದೊಡ್ಡ ಪ್ರಮಾಣದ ಹಾನಿಯಾಗಿದೆ. ಜಿಲ್ಲಾಡಳಿತ ಪರಿಹಾರ ಮತ್ತು ಪುನರ್ವಸತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಶ್ರಮಿಕ್ ರೈಲು ಕಾರ್ಯಾಚರಣೆಗಳ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆ ಮೇ 26ರವರೆಗೆ ಪಶ್ಚಿಮ ಬಂಗಾಳಕ್ಕೆ ಯಾವುದೇ ರೈಲುಗಳನ್ನು ಕಳುಹಿಸದಂತೆ ಮನವಿ ಮಾಡಿದ್ದಾರೆ.
ಅಂಫಾನ್ ಚಂಡಮಾರುತದಿಂದಾಗಿ ಕನಿಷ್ಠ 86 ಜನರು ಸಾವನ್ನಪ್ಪಿದ್ದಾರೆ. ಭೀಕರ ಹವಾಮಾನ ದುರಂತದಿಂದ ಸಾಮಾನ್ಯ ಜೀವನ ಪುನಃಸ್ಥಾಪಿಸಲು ಪರದಾಡುತ್ತಿದ್ದಾರೆ.
ಕೊರೊನಾ ವೈರಸ್ ಲಾಕ್ಡೌನ್ ಮಧ್ಯೆ ವಲಸೆ ಕಾರ್ಮಿಕರನ್ನು ತವರು ರಾಜ್ಯಗಳಿಗೆ ಸ್ಥಳಾಂತರದ ವೇಳೆ ಶ್ರಮಿಕ್ ರೈಲುಗಳ ಆಗಮನಕ್ಕೆ ಸಿಎಂ ಮಮತಾ ಬ್ಯಾನರ್ಜಿ ವಿರೋಧಿಸಿದ್ದರು. ಇದು ಗೃಹ ಸಚಿವ ಅಮಿತ್ ಶಾ ಹಾಗೂ ಮಮತಾ ಬ್ಯಾನರ್ಜಿ ನಡುವೆ ರಾಜಕೀಯ ಗುದ್ದಾಟಕ್ಕೂ ಕಾರಣವಾಗಿತ್ತು. ಬಳಿಕ ರೈಲುಗಳು ರಾಜ್ಯ ತಲುಪಲು ರಾಜ್ಯ ಸರ್ಕಾರದ ಒಪ್ಪಿಗೆ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸರ್ಕಾರ ಆದೇಶಿಸಿತ್ತು.