ರಾಮನಗರ: ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಭವಿಷ್ಯ ನುಡಿದಿದ್ದಾರೆ.
ಮಾಗಡಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಸಂಸದರು, ಸದ್ಯದ ಪರಿಸ್ಥಿತಿ ನೋಡಿದರೆ ಬಿಜೆಪಿಯವರೇ ಸರ್ಕಾರವನ್ನು ಬಿಳಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಮಾಗಡಿಯಲ್ಲಿ ಬಾಲಕೃಷ್ಣ ನೇತೃತ್ವದಲ್ಲಿ ಕಾಂಗ್ರೆಸ್ ಕಟ್ಟುತ್ತೇವೆ. ವಿರೋಧಿಗಳ ಹೇಳಿಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷ ಸದೃಢವಾಗಿ ಬೆಳೆಯಬೇಕು. ಚುನಾವಣೆಗೆ ಸಿದ್ಧತೆ ನಡೆಸಬೇಕು ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು. ಇದನ್ನೂ ಓದಿ: ಬಿಎಸ್ವೈ ಕೆಳಗಿಳಿಸಲು ರೆಬೆಲ್ ಟೀಂ ಭಾರೀ ಪ್ಲಾನ್ – ಬಂಡಾಯಕ್ಕೆ ಕಾರಣ ಏನು?
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಯಾರಿಂದಲೂ ಕಾಂಗ್ರೆಸ್ ಕಾರ್ಯಕ್ರಮವನ್ನು ಅಳಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರವು ಕೊರೊನಾ ಪ್ಯಾಕೇಜ್ 20 ಲಕ್ಷ ಕೋಟಿ ರೂ. ಹೆಸರಲ್ಲಿ ಜನರಿಗೆ ನಾಮ ಹಾಕಿದೆ. ಪ್ಯಾಕೇಜ್ನ ಮೊತ್ತದಲ್ಲಿ ಒಂದೇ ಒಂದು ಪೈಸೆ ಹಣ ಬಡವರಿಗೆ ತಲುಪುವುದಿಲ್ಲ. ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ ದೇಶದ ಬಡ ಜನರ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಇನ್ನೊಬ್ಬರ ಹೇಳಿಕೆ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸ, ನಡೆ, ನುಡಿಯ ಮೇಲೆ ನನಗೆ ನಂಬಿಕೆ ಇದೆ. ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಮುನಿಸಿಕೊಂಡಿದ್ದರೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಹೇಳಿದರು.