– ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನಿಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕಳೆದ 20 ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವು ನೀಡಿದ್ದ ವರುಣದೇವ ಇಂದು ಮತ್ತೆ ನಗರದಲ್ಲಿ ಅಬ್ಬರಿಸಿದ್ದಾನೆ. ಆಗಸ್ಟ್ ಮೊದಲ ವಾರದ ಮಳೆ ಮಲೆನಾಡಿಗರಲ್ಲಿ ಆತಂಕ ಹುಟ್ಟಿಸಿತ್ತು. ಒಂದೇ ವಾರದ ಮಳೆ ಮಲೆನಾಡಲ್ಲಿ ಸಾಕಷ್ಟು ಅನಾಹುತ ಸೃಷ್ಟಿಸಿತ್ತು. ಈಗ ಮತ್ತೆ ದಿಢೀರ್ ಮಳೆ ಕಂಡು ಜನ ಆತಂಕಕ್ಕೀಡಾಗಿದ್ದಾರೆ.
ಇತ್ತ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ಬಾರೀ ಮಳೆ ಕಡಿಮೆಯಾಗಿದೆ. ಬರೊಬ್ಬರಿ 14 ವರ್ಷಗಳ ಬಳಿಕ ಮೊದಲ ಬಾರಿಗೆ ಆಗಸ್ಟ್ ತಿಂಗಳಿನಲ್ಲಿ ಅತ್ಯಂತ ಕನಿಷ್ಠ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆದರೆ ದೇಶದಲ್ಲಿ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಅಧಿಕ ಪ್ರಮಾಣದ ಮಳೆಯಾಗಿದೆ. ಕಳೆದ 120 ವರ್ಷಗಳ ಅವಧಿಯಲ್ಲಿ ಸುರಿದ ಮಳೆ ಗರಿಷ್ಠ ಪ್ರಮಾಣದ ಮಳೆ ಸುರಿದಿದ್ದು, ಶೇ.27 ರಷ್ಟು ಅಧಿಕ ಪ್ರಮಾಣದ ಮಳೆ ಬಿದ್ದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಮೂರು ದಿನಗಳ ಕಾಲ ಉತ್ತರ ಭಾರತ, ಈಶಾನ್ಯ ರಾಜ್ಯಗಳು ಹಾಗೂ ದಕ್ಷಿಣ ಭಾರತದಲ್ಲಿ ಭಾರೀ ಮಳೆಯಾವ ಸಾಧ್ಯತೆ ಇದೆ.