ನವದೆಹಲಿ: ರಾಜ್ಯಕ್ಕೆ ಅಗತ್ಯ ಪ್ರಮಾಣ ರಸಗೊಬ್ಬರ ಒದಗಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದಗೌಡ ಅವರಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಹಿನ್ನೆಲೆ ದೆಹಲಿಯ ಶಾಸ್ತ್ರೀ ಭವನದಲ್ಲಿರುವ ಕಚೇರಿಯಲ್ಲಿ ಭೇಟಿಯಾದ ಬಿ.ಸಿ ಪಾಟೀಲ್, ರಾಜ್ಯದಲ್ಲಿ ಸೃಷ್ಟಿಯಾಗಿರುವ ಯೂರಿಯಾ ಗೊಬ್ಬರ ಅಭಾವದ ಬಗ್ಗೆ ಮಾಹಿತಿ ನೀಡಿದರು. ಮುಂಗಾರು ಮಳೆ ಉತ್ತಮವಾಗುತ್ತಿದ್ದು ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹೀಗಾಗಿ ರಾಜ್ಯದಲ್ಲಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಕೇಂದ್ರ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.
ಬಿ.ಸಿ ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡ ಡಿ.ವಿ ಸದಾನಂದಗೌಡ ಅಧಿಕಾರಗಳ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈಗಾಗಲೇ ರಾಜ್ಯ ಸರ್ಕಾರ ಅಗತ್ಯತೆಗೆ ಅನುಸಾರ ರಸಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.