ಕೋಲಾರ: ವ್ಯಾಕ್ಸಿನ್ ಹಾಕಿಸಿಕೊಳ್ಳುವ ಕ್ರೇಜ್ ಹಾಗೂ ಕೊರೊನಾ ಹೆದರಿಕೆ ಶುರುವಾಗಿದೆ. ಹಾಗಾಗಿ ವ್ಯಾಕ್ಸಿನ್ಗೆ ಬೇಡಿಕೆ ಸೃಷ್ಟಿಯಾಗಿರುವ ಕಾರಣ ರಾಜ್ಯದಲ್ಲಿ ಅವ್ಯವಸ್ಥೆ ಆಗಿದೆ ಎಂದು ಕೋಲಾರದಲ್ಲಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ವ್ಯಾಕ್ಸಿನ್ ಅವ್ಯವಸ್ಥೆಯನ್ನ ಒಪ್ಪಿಕೊಂಡಿದ್ದಾರೆ.
ಕೋಲಾರದ ಜಿಲ್ಲಾ ಎಸ್ಎನ್ಆರ್ ಆಸ್ಪತ್ರೆಗೆ ಭೇಟಿ ನೀಡಿ ಬೆಡ್, ಆಕ್ಸಿಜನ್, ವ್ಯಾಕ್ಸಿನ್ ಸೇರಿದಂತೆ ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಕ್ಸಿನ್ ಕುರಿತು ಸಿಎಂ ಕೂಡ ಹೇಳಿದ್ದಾರೆ. ರಾಜ್ಯದಲ್ಲಿ ಜನರು ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ. ನಮ್ಮ ರಾಜ್ಯಕ್ಕೆ ಬೇಕಾದ ವ್ಯಾಕ್ಸಿನ್ ನಮಗೆ ಸಿಗುತ್ತೆ ಎಂದಿದ್ದಾರೆ.
ಕೋವಿಶೀಲ್ಡ್ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಆದರೆ ಕೊವ್ಯಾಕ್ಸಿನ್ ಸಿಗುತ್ತಿಲ್ಲ. ರಾಜ್ಯದಲ್ಲಿ ವ್ಯಾಕ್ಸಿನ್ ಸಿಗುತ್ತಿಲ್ಲ ಎನ್ನುವುದನ್ನು ನಾನು ಒಪ್ಪಿಕೊಳ್ಳಲೇ ಬೇಕು ಎಂದು ರಾಜ್ಯದಲ್ಲಿರುವ ವ್ಯಾಕ್ಸಿನ್ ಅವ್ಯವಸ್ಥೆ ಒಪ್ಪಿಕೊಂಡಿದ್ದಾರೆ. ಕೋವ್ಯಾಕ್ಸಿನ್ ಉತ್ಪಾದನೆ ಕಡಿಮೆಯಾಗಿದ್ದು, ನಮಗಿಂತ ಬೇರೆ ರಾಜ್ಯದಲ್ಲಿ ಹೆಚ್ಚು ಆರ್ಡರ್ ಮಾಡಿದ್ದಾರೆ. ಹಾಗಾಗಿ ಇರುವುದರಲ್ಲಿ ಅಡ್ಜಸ್ಟ್ ಮಾಡಿ ಕೊಡುತ್ತಿದ್ದಾರೆ ಎಂದರು.
ಸೋಂಕಿನ ಪ್ರಮಾಣ ಹೆಚ್ಚಾದಂತೆ ಜನರಲ್ಲಿ ಅರಿವು ಹೆಚ್ಚಾಗಿದೆ. ಶೇ.30 ರಷ್ಟು ಸೋಂಕಿತ ಜನರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ ಸೋಂಕು ಹರಡಲು ಮತ್ತಷ್ಟು ಕಾರಣವಾಗಿದೆ. ಲಾಕ್ಡೌನ್ ಅನಿವಾರ್ಯತೆಯನ್ನು ಜನರೇ ನಿರ್ಮಾಣ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಕೇಸ್ಗಳು ಹೆಚ್ಚಾದರೆ ತಪ್ಪೇನಿಲ್ಲ, ಯಾಕೆಂದರೆ ನಮ್ಮಲ್ಲಿ ಟೆಸ್ಟಿಂಗ್ಗಳು ಹೆಚ್ಚಾಗುತ್ತಿದೆ. ಎರಡನೇ ಅಲೆಯಲ್ಲಿ ಏನಾಗುತ್ತದೆ ಅಂತ ಗೊತ್ತಾಗುತ್ತಿಲ್ಲ ಎಂದು ತಮ್ಮ ಅಸಾಹಯಕತೆಯನ್ನ ಹೇಳಿಕೊಂಡಿದ್ದಾರೆ. ಬೆಳಿಗ್ಗೆ ಒಂದು ರೀತಿ ಇದ್ದರೆ ಸಂಜೆಗೆ ಮತ್ತೊಂದು ಥರ ದೇಹದಲ್ಲಿ ಬದಲಾಗುತ್ತದೆ. ರೋಗ ಲಕ್ಷಣ ಇದ್ದರೆ ಕೋವಿಡ್ ಕೇರ್ ಸೆಂಟರ್ಗೆ ಕೂಡಲೇ ಕಳುಹಿಸಬೇಕು ಎಂದು ಆಶಾ ಕಾರ್ಯಕರ್ತರಿಗೆ, ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದರು.