– ಕಾಂಗ್ರೆಸ್ ವಿರುದ್ಧ ಕಿಡಿ
ಕಲಬುರಗಿ: ರಾಜ್ಯದ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೂ ನಾನು ಸ್ಪರ್ಧೆ ಮಾಡುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಬಿಜೆಪಿಗೆ ಸವಾಲು ಇದೆ. ಪಕ್ಷದ ಕಾರ್ಯಕರ್ತರು ಈ ಸವಾಲನ್ನು ಸಮರ್ಥವಾಗಿ ಎದುರಿಸುತ್ತಾರೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿದೆ. ಹೀಗಾಗಿ ನಾನು ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಗ್ಗೆ ಒಲವು ಹೊಂದಿದ್ದೇನೆ ಎಂದಿದ್ದಾರೆ.
ನಾನು ಸ್ಪರ್ಧೆ ಮಾಡುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ನಾನು ಎಲ್ಲಿ ಸ್ಪರ್ಧೆ ಮಾಡಬೇಕು, ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ರಾಜ್ಯದ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದ್ರು ಕೂಡಾ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಸದನದಲ್ಲಿ ಸಿಡಿ ಇಟ್ಟುಕೊಂಡು ಕೈ ನಾಯಕರ ಪ್ರತಿಭಟನೆಗೆ ಟಾಂಗ್ ನೀಡಿರುವ ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಮಾತನಾಡಲು ಕಾಂಗ್ರೆಸ್ಸಿಗೆ ಯಾವುದೇ ವಿಷಯ ಇಲ್ಲಾ. ಹೀಗಾಗಿ ಸಿಡಿ ಪ್ರಕರಣದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ಸಿನವರು ಮನಬಂದಂತೆ ಮಾತನಾಡುತ್ತಿರುವುದು ಯಾರಿಗೂ ಅರ್ಥವಾಗುತ್ತಿಲ್ಲ. ಸಿಡಿ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯೋವರಗೆ ಕಾಯಬೇಕು. ಅದನ್ನು ಬಿಟ್ಟು ಸದನದಲ್ಲಿ ಗದ್ದಲ ಮಾಡೋದು ಸರಿಯಲ್ಲ ಎಂದರು.
ಕಾಂಗ್ರೆಸ್ಸಿನವರಿಗೆ ನೈತಿಕತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಆರು ಸಚಿವರು ತಮ್ಮ ವಿರುದ್ಧ ಷಂಡ್ಯಂತ್ರ ಮಾಡಿದ್ದರಿಂದ ಕಾನೂನು ರಕ್ಷಣೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ವಿರುದ್ಧ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಕಾರ್ಯಕರ್ತರಿಗೆ ಬಹಳ ನೋವು ತರುತ್ತಿವೆ. ಈ ಹಿಂದೆ ಕೂಡಾ ಅನೇಕ ಘಟನೆಗಳಿಂದ ಪಕ್ಷಕ್ಕೆ ಮುಜಗರವಾಗಿತ್ತು. ಎಲ್ಲಾ ಬೆಳವಣಿಗೆಯನ್ನು ಹೈಕಮಾಂಡ್ ಗಮನಿಸುತ್ತಿದೆ. ಅಮಿತ್ ಶಾ ಮತ್ತು ಅರುಣಸಿಂಗ್ ಅವರು ಮುಖ್ಯಮಂತ್ರಿ ಬದಲಾವಣೆ ಇಲ್ಲ ಅಂತ ಹೇಳಿದ್ದಾರೆ. ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಕೇಂದ್ರದ ನಾಯಕರು ಮೆಚ್ಚಿಕೊಂಡಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.