ನವದೆಹಲಿ: ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನೆರವೇರಿರುವುದು ಇಡೀ ದೇಶಕ್ಕೆ ಹೆಮ್ಮೆಯನ್ನುಂಟು ಮಾಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
74ನೇ ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆ ನೆರವೇರಿರುವುದು ಇಡೀ ದೇಶಕ್ಕೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ ಕೊಂಡಾಡಿದ್ದಾರೆ.
ಇದೇ ವೇಳೆ ಗಡಿ ವಾಸ್ತವ ರೇಖೆಯುದ್ದಕ್ಕೂ ತಮ್ಮ ಶೌರ್ಯ ಪ್ರದರ್ಶಿಸಿದ್ದಕ್ಕಾಗಿ ಭಾರತೀಯ ಸಶಸ್ತ್ರ ಪಡೆಗಳನ್ನು ರಾಷ್ಟ್ರಪತಿಗಳು ಶ್ಲಾಘಿಸಿದರು. ಅಲ್ಲದೆ ಗಲ್ವಾನ್ ವ್ಯಾಲಿಯಲ್ಲಿ ಹುತಾತ್ಮರಾದ ಯೋಧರಿಗೆ ಇಡೀ ದೇಶ ಗೌರವ ಸಲ್ಲಿಸುತ್ತದೆ ಎಂದು ಹೇಳಿದರು.
ಕೊರೊನಾ ಸೋಂಕಿನ ಹಿನ್ನೆಲೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸುವ ಗಣ್ಯರ ಪಟ್ಟಿಯನ್ನು ರಾಷ್ಟ್ರಪತಿ ಭವನ ಕಡಿಮೆ ಮಾಡಿದೆ. ಸುಮಾರು 90 ಜನ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಶರದ್ ಬೊಬ್ಡೆಯವರನ್ನು ಆಹ್ವಾನಿಸಲಾಗಿದೆ.
ಮಧ್ಯಾಹ್ನದ ಕಾರ್ಯಕ್ರಮದಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಾಣೆ, ನೌಕಾ ಸೇನೆ ಮುಖ್ಯಸ್ಥ ಕರಮ್ವೀರ್ ಸಿಂಗ್, ವಾಯು ಸೇನೆ ಮುಖ್ಯಸ್ಥ ಆರ್ಕೆಎಸ್ ಭದೌರಿಯಾ ಅವರನ್ನು ಆಹ್ವಾನಿಸಲಾಗಿದೆ.