ರಾಮನಗರ: ಜಿಲ್ಲೆಯ ನಗರಸಭೆ ಕಾರ್ಯವೈಖರಿ ಹಾಗೂ ರೇಷ್ಮೆ ಗೂಡು ಮಾರುಕಟ್ಟೆ ಸ್ಥಳಾಂತರ ಖಂಡಿಸಿ ಜನ ಜಾಗೃತಿ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಇಂದು ರಾಮನಗರ ಬಂದ್ ಮಾಡಲು ಕರೆ ನೀಡಿವೆ.
ಜನ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಶೇಷಾದ್ರಿ ನೇತೃತ್ವದಲ್ಲಿ ಬಂದ್ ಜರುಗಲಿದ್ದು, ಬೆಳಗ್ಗೆ 11 ಗಂಟೆಗೆ ರಾಮನಗರದ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಕಾರರು ಪಾದಯಾತ್ರೆ ಕೈಗೊಳ್ಳಲಿದ್ದಾರೆ.
ನಗರಸಭೆಯಲ್ಲಿ ನಡೆಯುತ್ತಿರುವ ಅಕ್ರಮ ನಿಲ್ಲಬೇಕು ಹಾಗೂ ಏಷ್ಯಾದಲ್ಲೇ ಅತಿದೊಡ್ಡ ರೇಷ್ಮೆ ಗೂಡು ಮಾರುಕಟ್ಟೆ ಎನಿಸಿಕೊಂಡಿರುವ ರಾಮನಗರ ರೇಷ್ಮೆ ಗೂಡು ಮಾರುಕಟ್ಟೆಯನ್ನು ಸ್ಥಳಾಂತರ ಮಾಡುವ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕು ಎಂದು ಹೋರಾಟ ಮಾಡಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿಂದು 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕೆಂದು ರಾಮನಗರ ತಹಶೀಲ್ದಾರ್ ನರಸಿಂಹಮೂರ್ತಿ ಪೊಲೀಸರಿಗೆ ಆದೇಶಿಸಿದ್ದಾರೆ.
ಪಾದಯಾತ್ರೆ ಜೊತೆಗೆ ಜನ ಜಾಗೃತಿ ವೇದಿಕೆ ಕಾರ್ಯಕರ್ತರು ಹಾಗೂ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ಅಲ್ಲದೆ ಅಂಗಡಿ ಮುಗ್ಗಟ್ಟುಗಳನ್ನು ತೆರೆಯದೆ ಬಂದ್ ಗೆ ಬೆಂಬಲ ನೀಡಿ ಎಂದು ಇತರರಿಗೂ ಕರೆ ನೀಡಿದ್ದಾರೆ.