-ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ
ಕೊಪ್ಪಳ: ರೈತರನ್ನು ಕೆಲವರು ಪ್ರಚೋದನೆ ಮಾಡುತ್ತಿದ್ದಾರೆ. ಈ ಮೂಲಕ ರೈತರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಸಚಿವ ಬಿ.ಸಿ ಪಾಟೀಲ್ ಆರೋಪಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಸಂದರ್ಭಗಳಲ್ಲಿ ಕಾಯ್ದೆ ವಿರೋಧಿಸಿದವರು ಪ್ರಚೋದನೆ ಮಾಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅಧಿಕಾರಿಗಳು ಟ್ರ್ಯಾಕ್ಟರ್ ಗಳನ್ನು ಸೀಜ್ ಮಾಡುತ್ತಿರಬಹುದು ಎಂದು ಹೇಳಿದ್ದಾರೆ.
ಖಾತೆಗಳ ಬದಲಾವಣೆ ಮುಖ್ಯಮಂತ್ರಿಗಳ ವಿವೇಚನೆಂಗೆ ಬಿಟ್ಟಿದ್ದು. ಸಿಎಂ ಹಿರಿಯರು, ಬುದ್ಧಿವಂತರು, ಮುತ್ಸದ್ದಿಗಳಾಗಿದ್ದಾರೆ. ಹೀಗಾಗಿ ಅವರು ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗ್ತಾರೆ. ಇನ್ನು ಆನಂದ್ ಸಿಂಗ್ ಅರಣ್ಯ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದರು. ಖಾತೆ ಬದಲಾವಣೆಯಿಂದ ಸ್ವಲ್ಪ ಅಸಮಧಾನಗೊಂಡಿದ್ದಾರೆ. ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಆಗುವುದಾಗಿ ಹೇಳಿದ್ದಾರೆ ಎಂದು ನುಡಿದರು.
ಖಾತೆ ವಿಷಯದಲ್ಲಿ ಬಾಂಬೆ ಟೀಂ ಅಸಮಾಧಾನವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಾಂಬೆನೂ ಇಲ್ಲ ಬೆಂಗಳೂರು ಇಲ್ಲ. ಎಲ್ಲಾ ಬಿಜೆಪಿ ಟೀಂ ಇದ್ದು, ನಾಲ್ಕೈದು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ಇನ್ನು ವಿಶ್ವನಾಥ್ ಅವರ ಕೇಸ್ ಬೇರೆ ಆಗಿದ್ದು, ಅವರ ಪ್ರಕರಣ ಕೋರ್ಟ್ ನಲ್ಲಿದೆ. ಅವರನ್ನು ಸರ್ಕಾರ ನೇಮಕ ಮಾಡಿದ್ದು, ಇದರಿಂದಾಗಿ ಅವರನ್ನು ಸಚಿವರನ್ನಾಗಿ ಮಾಡಲು ಆಗಿಲ್ಲ ಎಂದು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತು ಸಿಎಂ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ, ಎಸ್ಪಿಗೆ ಸೂಚಿಸಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾದವರ ವಿರುದ್ಧ ತನಿಖೆ ಮಾಡಿಸಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.