ಶಿವಮೊಗ್ಗ: ಕೆಲವು ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವ ಉಳಿವಿಗಾಗಿ ರೈತರ ಹೆಸರಿನಲ್ಲಿ ಹೋರಾಟ ಮಾಡುತ್ತಿವೆ. ರೈತರು ಈ ಕುತಂತ್ರವನ್ನು ಅರಿತುಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೈತರ ಅನುಕೂಲಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ರೈತ ಪರವಾದ ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆದರೆ ಎಡ ಪಕ್ಷಗಳು ಹಾಗೂ ಇತರೆ ಪಕ್ಷಗಳು ರಾಜಕೀಯ ಕುತಂತ್ರದಿಂದಾಗಿ ರೈತರ ಹೆಸರಿನಲ್ಲಿ ಪ್ರತಿಭಟನೆ, ಬಂದ್ ನಡೆಸುತ್ತಿವೆ ಎಂದು ಕಿಡಿಕಾರಿದಾರು.
ರೈತರಿಗಾಗಿ ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಏನನ್ನೂ ಮಾಡಿಲ್ಲ. ಮೋದಿಯವರ ವರ್ಚಸ್ಸಿಗೆ ಧಕ್ಕೆ ತರಲು ರೈತರ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯ ವರ್ತಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಸಗಟು ತರಕಾರಿ ವರ್ತಕರು ಅಂಗಡಿಗಳನ್ನು ಮುಚ್ಚಿದ್ದಾರೆ. ಸದಾ ಜನಜಂಗುಳಿಯಿಂದ ತುಂಬಿರುತ್ತಿದ್ದ ಮಾರುಕಟ್ಟೆ ಬಂದ್ ಹಿನ್ನೆಲೆಯಲ್ಲಿ ಇಂದು ಖಾಲಿ ಖಾಲಿಯಾಗಿದೆ.