ಬೆಂಗಳೂರು: ಲಾಕ್ಡೌನ್ ಮಾಡುವುದಿಲ್ಲ. ಆದರೆ ಬೆಂಗಳೂರಿನಲ್ಲಿ ಕಠಿಣ ಕ್ರಮ ಇರಲಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಟಫ್ ರೂಲ್ಸ್ ಜಾರಿ ಬಗ್ಗೆ ನಾಳೆ ಬೆಂಗಳೂರು ಶಾಸಕರ ಸಭೆಯನ್ನು ಕರೆದಿರುವ ಹಿನ್ನೆಲೆಯಲ್ಲಿ ಇಂದು ಕುಮಾರಕೃಪಾ ಗೆಸ್ಟ್ ಹೌಸ್ನಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ಭಾಗಿಯಾಗಿದ್ದರು.
ಸಭೆಯ ಬಳಿಕ ಮಾತನಾಡಿದ ಸುಧಾಕರ್, ರಾಜ್ಯವ್ಯಾಪಿ ನೈಟ್ ಕರ್ಫ್ಯೂ ವಿಸ್ತರಣೆ ಜಾರಿ ವಿಚಾರವನ್ನು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದೇವೆ. ಲಾಕ್ಡೌನ್ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಬಡವರಿಗೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.
ಅನೌಪಚಾರಿಕವಾಗಿ ನಾಳೆಯ ಸಭೆಯ ಪೂರ್ವಭಾವಿಯಾಗಿ ಸಭೆ ಮಾಡಿದ್ದೇವೆ. ಬಿಗಿಯಾದ ಕ್ರಮ ತೆಗೆದುಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ಗೃಹ ಇಲಾಖೆ ಜೊತೆ ಚರ್ಚೆಯಾಗಿದೆ. ವಿಪತ್ತು ನಿರ್ವಹಣಾ ಸಮಿತಿಯಿಂದ ಜಿಲ್ಲೆಗೆ ಹಣ ಬಿಡುಗಡೆ ಆಗಬೇಕು. ಇದನ್ನು ರಿಲೀಸ್ ಮಾಡಲು ಮನವಿ ಮಾಡಿದ್ದು, ಕಂದಾಯ ಇಲಾಖೆ ಕೂಡಾ ಹಣ ಬಿಡುಗಡೆಗೆ ಒಪ್ಪಿದೆ. ನಾಳೆ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಬರುವ ಸಲಹೆ ಆಧಾರದಲ್ಲಿ ಮುಂದೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಇದು ಸಾಂಕ್ರಾಮಿಕ ರೋಗವಾಗಿದ್ದು, ಬೇರೆ ಬೇರೆ ದೇಶದಲ್ಲಿ ಯಾವ ಕ್ರಮ ತೆಗೆದುಕೊಂಡಿದ್ದಾರೆ. ಸೋಂಕು ನಿಯಂತ್ರಿಸಲು ಏನೆಲ್ಲಾ ಕ್ರಮ ತೆಗೆದುಕೊಂಡಿದ್ದಾರೆ ಗಮನಿಸಿದ್ದೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ, ನಿರ್ದೇಶನವನ್ನು ಪಾಲಿಸುತ್ತೇವೆ. ಎಲ್ಲವನ್ನು ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.