ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ ಕಾಣುತ್ತಿದ್ದರೂ ಕೂಡ ಜನ ಮಾತ್ರ ಬುದ್ಧಿ ಕಲಿತಿಲ್ಲ. ಲಾಕ್ಡೌನ್ ಮಧ್ಯೆ ನಿಯಮ ಉಲ್ಲಂಘಿಸಿ ಗ್ರಾಮದಲ್ಲಿ ಮಾರಿ ಹಬ್ಬ ಆಚರಿಸಿ ಸಾವಿರಾರು ಕೋಳಿಗಳನ್ನು ಬಲಿ ಕೊಟ್ಟಿದ್ದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಲ್ಕೆರೆ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಗ್ರಾಮಸ್ಥರು ಕೊರೊನಾ ಹೋಗಲಾಡಿಸಲು ಬಲಿ ಪೂಜೆ ಆಚರಣೆ ಮಾಡುವ ಮೂಲಕ ನಿಯಮ ಉಲ್ಲಂಘನೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡು ಬಂದರೂ ಜನ ಮಾತ್ರ ಕ್ಯಾರೆ ಎನ್ನದೇ ಮಾಸ್ಕ್ ಧರಿಸದೇ ಬೇಕಾಬಿಟ್ಟಿ ಹಬ್ಬ ಆಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಪ್ರತಿ ವರ್ಷ ಗ್ರಾಮದಲ್ಲಿ ಮಾರಿ ಹಬ್ಬ ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಆಚರಣೆಗೆ ಬ್ರೇಕ್ ಹಾಕಲಾಗಿತ್ತು. ಆದರೂ ಗ್ರಾಮದ ಕೆಲವರು ನಿಯಮ ಉಲ್ಲಂಘಿಸಿ ಕೋಳಿ ಬಲಿಕೊಟ್ಟು ಕೊರೊನಾ ಮುಕ್ತವಾಗಲಿ ಗ್ರಾಮಕ್ಕೆ ಒಳಿತಾಗಲಿ ಎಂದು ಪೂಜೆ ಸಲ್ಲಿಸಿದ್ದಾರೆ.