ಅಯೋಧ್ಯೆ: ಬುಧವಾರ ರಾಮ ದೇವಾಲಯದ ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ.
ಬುಧವಾರ ಬೆಳಗ್ಗೆ 11.15ಕ್ಕೆ ಸಾಕೇತ್ ಕಾಲೇಜ್ನ ಹೆಲಿಪ್ಯಾಡ್ಗೆ ಮೋದಿ ದೆಹಲಿಯಿಂದ ಆಗಮಿಸಲಿದ್ದಾರೆ. ಬಳಿಕ ಹೆಲಿಪ್ಯಾಡ್ನಿಂದ ನೇರವಾಗಿ ಹನುಮಂತ ದೇವಾಲಯಕ್ಕೆ ತೆರಳಲಿದ್ದಾರೆ. ಇಲ್ಲಿ 7 ನಿಮಿಷಗಳ ಕಾಲ ಪೂಜೆಯಲ್ಲಿ ಭಾಗಿಯಾದ ಬಳಿಕ ರಾಮಜನ್ಮಭೂಮಿಗೆ ಗೇಟ್ ನಂ.3ರ ಮೂಲಕ ಆಗಮಿಸಲಿದ್ದಾರೆ.
ಕಾರ್ಯಕ್ರಮ ಆಯೋಜನೆಗೊಂಡಿರುವ ಸ್ಥಳಕ್ಕೆ ನೇರವಾಗಿ ಮೋದಿ ತೆರಳಬಹದುಲ್ಲವೇ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಹನುಮಂತ ದೇವಾಲಯ ಅರ್ಚಕರಾಗಿರುವ ಮಾಧವನ್ ದಾಸ್ ಉತ್ತರ ನೀಡಿದ್ದಾರೆ. ಇದನ್ನೂ ಓದಿ: 800 ಕಿ.ಮೀ ನಡ್ಕೊಂಡೇ ಅಯೋಧ್ಯೆ ಭೂಮಿ ಪೂಜೆಗೆ ಹೊರಟ ಫಯಾಜ್ ಖಾನ್!
ಹನುಮಂತ ಇಲ್ಲದೇ ರಾಮನ ಯಾವುದೇ ಕೆಲಸ ಆರಂಭಗೊಳ್ಳುವುದಿಲ್ಲ. ಈ ಕಾರಣಕ್ಕೆ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರು ಮೊದಲು ಹನುಮಂತನ ಪೂಜೆ ಮಾಡಿ ಆಶೀರ್ವಾದ ಪಡೆದ ಬಳಿಕ ರಾಮ ದೇವಸ್ಥಾನದ ಭೂಮಿ ಪೂಜೆಗೆ ತೆರಳುತ್ತಿದ್ದಾರೆ ಎಂದು ಅವರು ತಿಳಿಸಿದರು.
ಭೇಟಿಯ ಹಿನ್ನೆಲೆಯಲ್ಲಿ ಪ್ರಧಾನಿ ಕಚೇರಿಯಿಂದ ಬಂದಿರುವ ಮಾರ್ಗಸೂಚಿಗಳನ್ನು ಪಾಲಿಸುತ್ತೇವೆ. ಯಾರೂ ಪ್ರಧಾನಿಯನ್ನು ಸ್ಪರ್ಶಿಸುವಂತಿಲ್ಲ ಮತ್ತು ಪ್ರಸಾದ ನೀಡುವಂತಿಲ್ಲ ಎಂದು ಮಾಧವನ್ ದಾಸ್ ಹೇಳಿದರು.
ಮಧ್ಯಾಹ್ನ 12.15ಕ್ಕೆ ಭೂಮಿಪೂಜೆ ಕಾರ್ಯಕ್ರಮ ನಡೆಯಲಿದೆ. ಈ ವೇಳೆ 40 ಕೆಜಿ ತೂಕದ ಬೆಳ್ಳಿಯ ಇಟ್ಟಿಗೆಯನ್ನು ಇಡುವ ಮೂಲಕ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.
25 ನಿಮಿಷಗಳ ಕಾಲ ನಡೆಯಲಿರುವ ಪೂಜೆ ನಡೆಯಲಿದ್ದು, ಭೂಮಿ ಪೂಜೆ ಬಳಿಕ 45 ನಿಮಿಷ ಮೋದಿ ಭಾಷಣ ಮಾಡಲಿದ್ದಾರೆ. ಇದಾದ ಬಳಿಕ ಸರಯೂ ನದಿ ಬಳಿ ಮೋದಿ ತೆರಳಲಿದ್ದಾರೆ. ಒಟ್ಟು 2 ಗಂಟೆ 15 ನಿಮಿಷಕ್ಕೂ ಅಧಿಕ ಕಾಲ ಅಯೋಧ್ಯೆಯಲ್ಲಿ ಮೋದಿ ಇರಲಿದ್ದಾರೆ.