ಬೆಂಗಳೂರು: ಪರೀಕ್ಷೆಗಳು ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಬಸ್ ಪಾಸ್ ಅವಧಿಯನ್ನು ಕೆಎಸ್ಆರ್ ಟಿಸಿ ವಿಸ್ತರಿಸಿದ್ದು, ಸೆಪ್ಟೆಂಬರ್ ಅಂತ್ಯದ ವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಕೆಎಸ್ಆರ್ ಟಿಸಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಪರೀಕ್ಷೆಗಳು ನಡೆಯುವ ಉದ್ದೇಶದಿಂದ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿದೆ. ವೃತ್ತಿಪರ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಳೆದ ವರ್ಷ ವಿತರಣೆಯಾಗಿರುವ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಸೆಪ್ಟೆಂಬರ್ ತಿಂಗಳಲ್ಲಿ ವೃತ್ತಿಪರ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ವರ್ಷದ ಹೊಸ ಪಾಸ್ ವಿತರಣೆಯಾಗಿಲ್ಲ. ಈ ಹಿನ್ನೆಲೆ ಸೆಪ್ಟೆಂಬರ್ ತಿಂಗಳು ಪೂರ್ತಿ ಎಲ್ಲ ಜಿಲ್ಲೆಗಳ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.