ನವದೆಹಲಿ: ಸಿಬಿಎಸ್ಇ ಮತ್ತು ಯುಜಿಸಿ ನಡೆಸುತ್ತಿರುವ ಎಲ್ಲ ಪರೀಕ್ಷೆಗಳನ್ನು ಮುಂದೂಡವಂತೆ ಆಗ್ರಹಿಸಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ ಪೋಖ್ರಿಯಾಲ್ ನಿವಾಸದೆದರು ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಎನ್ಎಸ್ಯುಐನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ ಕರಿಯಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಲಾಯಿತು.
ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಸಿಬಿಎಸ್ಇ ಬೋರ್ಡ್ 12ನೇ ತರಗತಿ ಪರೀಕ್ಷೆಗಳನ್ನು ನಡೆಸಲು ತಯಾರಿ ಮಾಡಿಕೊಳ್ಳುತ್ತಿದೆ ಜೊತೆಗೆ ಜೆಇಇ ಮುಖ್ಯ ಪರೀಕ್ಷೆ, ನೀಟ್, ಸಿಎಸ್, ಡಿಬಿಟಿ-ನೆಟ್ ಮತ್ತು ಇತರ ಪರೀಕ್ಷೆಗಳ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆದಿದ್ದು, ಇದು ಉತ್ತಮ ಬೆಳವಣಿಗೆಯಲ್ಲ ಎಂದು ಆರೋಪಿಸಿದರು.
ಕೊರೊನಾ ವೇಗವಾಗಿ ಹರಡುವ ಸಂದರ್ಭದಲ್ಲಿ ಪರೀಕ್ಷೆ ನಡೆಸಿದರೆ ಮಕ್ಕಳಲ್ಲಿ ಸೋಂಕು ಹರಡುವ ಪ್ರಮಾಣ ಹೆಚ್ಚಾಗಲಿದೆ. ಪರೀಕ್ಷೆಗಳಿಗಾಗಿ ಮಕ್ಕಳು ಕಂಟೈನ್ಮೆಂಟ್ ಝೋನ್ಗೆ ಬರಬೇಕಾಗಬಹುದು ಅಲ್ಲದೆ ಪ್ರಯಾಣ ಮಾಡುವ ಸಾಧ್ಯತೆಗಳಿದ್ದು, ಇದರಿಂದ ಸೋಂಕು ಹರಡಬಹುದು ಎಂದು ಆತಂಕ ವ್ಯಕ್ತಪಡಿಸಿದರು.
ತಾತ್ಕಾಲಿಕವಾಗಿ ಪರೀಕ್ಷೆಗಳನ್ನು ಮುಂದೂಡಬೇಕು, ಪದವಿ ವಿದ್ಯಾರ್ಥಿಗಳನ್ನು ಹಿಂದಿನ ಫಲಿತಾಂಶ ಮತ್ತು ಆತಂರಿಕ ಮೌಲ್ಯಮಾಪನ ಆಧಾರದಡಿ ಉತ್ತೀರ್ಣಗೊಳಿಸುವಂತೆ ಮನವಿ ಮಾಡಿದರು.