ಕೊಪ್ಪಳ: ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡಿಯಲ್ಲಿ ಎರಡು ವರ್ಷದ ಹೆಣ್ಣು ಚಿರತೆ ಮರಿಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ.
ಕಳೆದ ಮೂರ್ನಾಲ್ಕು ತಿಂಗಳಿಂದ ಆನೆಗೊಂದಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಈಗಾಗಲೇ ಚಿರತೆ ದಾಳಿಗೆ ಇಬ್ಬರು ಯುವಕರು ಬಲಿಯಾಗಿದ್ದು,ಜನ-ಜಾನುವಾರುಗಳ ಮೇಲೂ ಚಿರತೆ ದಾಳಿ ಮಾಡಿ ಗಾಯಗೊಳಿಸಿತ್ತು.
ಚಿರತೆ ಸೆರೆಹಿಡಿಯಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ ಅರಣ್ಯ ಇಲಾಖೆ ಕಳೆದ ಎರಡು ತಿಂಗಳಲ್ಲಿ ಆನೆಗೊಂದಿ ಭಾಗದಲ್ಲಿ ಮೂರು ಚಿರತೆಗಳನ್ನು ಸೆರೆಹಿಡಿದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚಿರತೆಗೆ ಅರವಳಿಕೆ ನೀಡಿ, ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಗೆ ಕಳುಹಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಶಿವರಾಜ್ ಮೇಟಿ ತಿಳಿಸಿದ್ದಾರೆ.