ಮಡಿಕೇರಿ: ವಿವಿಧ ಯೋಜನೆಗಳ ಅಡಿಯಲ್ಲಿ ಕೊಡಗಿನ 25ಕ್ಕೂ ಹೆಚ್ಚು ರೈತರಿಗೆ ಸಹಕಾರ ಸಚಿವ ಸೋಮಶೇಖರ್ ಚೆಕ್ ವಿತರಣೆ ಮಾಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರೈತರಿಗೆ ಸಾಲದ ಚೆಕ್ ವಿತರಿಸಿದರು. ಈ ವೇಳೆ ಮಾತನಾಡಿದ ಸಚಿವ ಸೋಮಶೇಖರ್, ರಾಜ್ಯದಲ್ಲಿ ಸಹಕಾರ ಬ್ಯಾಂಕ್ ಗಳ ಮೂಲಕ ಈಗಾಗಲೇ 30 ಲಕ್ಷ ರೈತರಿಗೆ 20,810 ಕೋಟಿ ಸಾಲ ನೀಡಲು ಗುರಿ ನಿಗದಿ ಮಾಡಲಾಗಿದೆ. ಇಂದು ಕೊಡಗು ಜಿಲ್ಲೆಯಲ್ಲಿ ಈ ಸಾಲ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.
ಸಹಕಾರ ಕ್ಷೇತ್ರದ ಮೂಲಕ ಲಕ್ಷಾಂತರ ರೈತರ ಜೀವನ ಸುಧಾರಿಸಲು ಅನುಕೂಲವಾಗಿದೆ. ಜೊತೆಗೆ ಸಾವಿರಾರು ಜನರಿಗೆ ಉದ್ಯೋಗ ದೊರಕಿಸಿದೆ. ಇದೇ ಮೊದಲ ಬಾರಿಗೆ ಕೇಂದ್ರದಲ್ಲಿ ಸಹಕಾರ ಇಲಾಖೆ ಹಾಗೂ ಸಹಕಾರ ಮಂತ್ರಿಯನ್ನು ಮಾಡುತ್ತಿದ್ದಾರೆ. ಎಷ್ಟೋ ವರ್ಷಗಳ ಕಾಲ ಈ ಸ್ಥಾನ ಇರಲ್ಲಿಲ್ಲ. ಮೊದಲು ಬೇರೆ ಇಲಾಖೆಯೊಂದಿಗೆ ಸಹಕಾರ ಇಲಾಖೆ ಇತ್ತು. ಆದರೆ ಇದೇ ಮೊದಲ ಬಾರಿಗೆ ಪ್ರತ್ಯೇಕವಾಗಿ ಈ ಇಲಾಖೆ ಮಾಡಿರುವುದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹೊಂದಾಣಿಕೆಯಿಂದ ಹೋಗುವುದಕ್ಕೆ ಬಹಳ ಅನುಕೂಲವಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.