ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಕಂಗೆಟ್ಟಿದ್ದ ಜನರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೀಗ ಆರ್ಥಿಕ ಸಂಕಷ್ಟದ ಕಾಲದಲ್ಲಿ ಪ್ಯಾಕೇಜ್ ಘೋಷಣೆ ಮಾಡಿದ್ದೇನೆ ಎಂದು ಹೇಳುವ ಮೂಲಕ ಸಿಎಂ ತಮ್ಮ ವಿಶೇಷ ಆರ್ಥಿಕ ಪ್ಯಾಕೇಜ್ನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಂದರ್ಭ ನಾನು ಘೋಷಣೆ ಮಾಡಿದ್ದೇನೆ. 1,250ಕೋಟಿ ರೂ. ಪ್ಯಾಕೇಜ್ ರಾಜ್ಯದ ಜನತೆಗೆ ನೀಡಿದ್ದೇನೆ ಎಂದು ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡಿದ್ದಾರೆ.
ಇತ್ತ ವಿರೋಧ ಪಕ್ಷಗಳು ಯಡಿಯೂರಪ್ಪ ಅವರು ಘೋಷಿಸಿರುವ ವಿಶೇಷ ಪ್ಯಾಕೇಜ್ ಏನು ಪ್ರಯೋಜನವಿಲ್ಲ. ಕಳೆದ ವರ್ಷ ಘೋಷಣೆ ಮಾಡಿದ್ದೇ ಯಾರ ಕೈಸೇರಿಲ್ಲ ಎನ್ನುವ ಮೂಲಕ ಟೀಕೆ ವ್ಯಕ್ತಪಡಿಸಿವೆ. ಈ ಕುರಿತು ಮಾಧ್ಯಮಗಳು ಪ್ರಶ್ನೆ ಎತ್ತುತ್ತಿದ್ದಂತೆ ಪ್ರತಿಕ್ರಿಯೆಗೆ ಯಡಿಯೂರಪ್ಪ ನಿರಾಕರಿಸಿದರು.