ಶಿವಮೊಗ್ಗ : ಮಲೆನಾಡಿನಲ್ಲಿ ಜನ್ಮತಾಳುವ ಶರಾವತಿ ನೀರನ್ನು ಯಾವುದೇ ಕಾರಣಕ್ಕೂ ಬೆಂಗಳೂರಿಗೆ ತೆಗೆದುಕೊಂಡು ಹೋಗುವುದಕ್ಕೆ ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವರು, ಶರಾವತಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಅದು ಯಾವ ಮಹಾನುಭಾವ ಪ್ರಸ್ತಾವನೆ ಸಲ್ಲಿಸಿದರೋ ನನಗಂತೂ ಗೊತ್ತಿಲ್ಲ. ಎಲ್ಲಿಂದ ಎಲ್ಲಿಗೆ ಇದು ಎಂದು ಪ್ರಶ್ನೆ ಮಾಡಿದ ಸಚಿವರು ಇದೊಂದು ಹುಚ್ಚು ದರ್ಬಾರ್ ಆಗುತ್ತೆ ಎಂದರು.
ಈ ಕಾಮಗಾರಿಗೆ ಸಂಬಂಧಿಸಿದಂತೆ ಶರಾವತಿ ಭಾಗದಲ್ಲಿ ಸರ್ವೇ ಕಾರ್ಯ ನಡೆಯುತ್ತಿದೆ ಎಂದು ಮಲೆನಾಡಿನ ಜನತೆ ಆತಂಕ ವ್ಯಕ್ತಪಡಿಸಿದ್ದಾರೆ. ಯಾರೋ ಒಬ್ಬರು ಬಂದು ಹೆಲಿಕ್ಯಾಪ್ಟರ್ ನಲ್ಲಿ ಹಾರಾಟ ನಡೆಸಿದರೇ, ಯಾರೋ ಒಬ್ಬರು ಸ್ಥಳಕ್ಕೆ ಬಂದು ನೋಡಿಕೊಂಡು ಹೋದರೆ ಅದಕ್ಕೆ ಸರ್ವೇ ಎನ್ನಲು ಸಾಧ್ಯವೇ ಎಂದರು.
ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ನಾವು ಸದ್ಯದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದರು. ಅಲ್ಲದೇ ಕೊರೊನಾದಿಂದಾಗಿ ಈಗಾಗಲೇ ಕಾರ್ಯರೂಪಕ್ಕೆ ಸಿದ್ದವಾಗಿದ್ದ ಎಷ್ಟೋ ಯೋಜನೆಗಳು ಮತ್ತು ಕಾಮಗಾರಿಗಳನ್ನು ಕಡಿತಗೊಳಿಸಲಾಗಿದ್ದು, ಕೇವಲ ಕೋವಿಡ್ ಬಗ್ಗೆ ಮಾತ್ರ ಗಮನ ಹರಿಸಲಾಗುತ್ತಿದೆ. ಹೀಗಾಗಿ ಶರಾವತಿ ನೀರು ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಹೋಗುವುದಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.