– ರಸ್ತೆ ಸಾರಿಗೆ ಪ್ರಾಧಿಕಾರದ ಸಭೆ
– ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ
ಶಿವಮೊಗ್ಗ: ಜಿಲ್ಲೆಯಲ್ಲಿ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಶೇ.25 ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಗಳಲ್ಲಿ ಈಗಾಗಲೇ ಖಾಸಗಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವಂತೆ ಜಿಲ್ಲೆಯಲ್ಲಿಯೂ ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಖಾಸಗಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ನಡುವೆ ಅನಾರೋಗ್ಯಕರ ಪೈಪೋಟಿ ತಪ್ಪಿಸಲು ಎರಡು ಕಡೆಯವರು ಸಹಕರಿಸಬೇಕು. ಸರ್ಕಾರಿ ಬಸ್ ನಿಲ್ದಾಣದ ಒಳಗೆ ಖಾಸಗಿಯವರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಅನಾರೋಗ್ಯಕರ ಪೈಪೋಟಿಯಲ್ಲಿ ತೊಡಗುವ ಬಸ್ಗಳನ್ನು ತಡೆದು ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಲು ಸಂಚಾರಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಸೂಚಿಸಿದ್ದಾರೆ.
ಆಟೋ ರಿಕ್ಷಾ ಪ್ರಯಾಣದ ಕನಿಷ್ಟ ದರವನ್ನು ರೂ.40ಕ್ಕೆ ಪರಿಷ್ಕರಿಸಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ಬೇರೆ ಜಿಲ್ಲೆಗಳಲ್ಲಿರುವ ಕನಿಷ್ಟ ದರ ಸೇರಿದಂತೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಇದೇ ರೀತಿ ಶಿವಮೊಗ್ಗ ನಗರದ 20 ಕಿ.ಮೀ ವ್ಯಾಪ್ತಿಯಲ್ಲಿ ಆಟೋ ಚಾಲನೆಗೆ ಅವಕಾಶ ನೀಡಬೇಕೆಂಬ ಮನವಿ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅವರು ಪರಿಶೀಲಿಸಿ ವರದಿ ಸಲ್ಲಿಸಲಿದ್ದಾರೆ. ಅದರ ಆಧಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹೊಸ ಆಟೋ ಪರವಾನಿಗೆ ಅವಕಾಶ ನೀಡಲಾಗುತ್ತಿಲ್ಲ. ಇಲೆಕ್ಟ್ರಿಕಲ್ ಆಟೋಗಳಿಗೆ ಪರವಾನಿಗೆ ಅಗತ್ಯವಿಲ್ಲ. ಆದರೆ ಅದರ ಚಾಲಕರು ಸಹ ಸಮವಸ್ತ್ರವನ್ನು ಧರಿಸಬೇಕು. ಆಟೋ ಮೀಟರ್ ಹಾಕದಿರುವ ಬಗ್ಗೆ ಹೆಚ್ಚಿನ ದರ ವಸೂಲು ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅದಕ್ಕೆ ಅವಕಾಶ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಮೀಟರ್ ಹಾಕಿ ಆಟೋ ಚಲಾಯಿಸಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕೆಲವು ವಾಹನಗಳಲ್ಲಿ ಕಣ್ಣು ಕುಕ್ಕುವ ಎಲ್ಇಡಿ ಹೆಡ್ಲೈಟ್ ಅಳವಡಿಕೆಯಿಂದ ಅಪಘಾತಗಳು ಸಂಭವಿಸಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ವಾಹನಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಆರ್ಟಿಒ ಶ್ರೀಧರ್, ವಿವಿಧ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೊಮ್ಮಾಯಿ ಜನತಾದಳದ ಸಿಎಂ – ಎಚ್ಡಿ ಕುಮಾರಸ್ವಾಮಿ