ಚಾಮರಾಜನಗರ: ಬೆಳಗಾವಿ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ ಖಂಡಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊರಕೆ ಚಳವಳಿ ನಡೆಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು, ಚಪ್ಪಲಿ ಹಾಗೂ ಪೊರಕೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಗಡಿಗೆ ನುಗ್ಗಲು ಯತ್ನಿಸಿರುವ ಶಿವಸೇನೆ ಕಾರ್ಯಕರ್ತರನ್ನು ಬಂಧಿಸಿ ತಕ್ಕ ಪಾಠ ಕಲಿಸಬೇಕು ಎಂದು ಆಗ್ರಹಿಸಿದರು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗಡಿ ವಿವಾದಕ್ಕೆ ತುಪ್ಪ ಸುರಿಯುತ್ತಿದ್ದಾರೆಂದು ಆರೋಪಿಸಿ ಅವರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಿನ್ನೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಪುಂಡಾಟಿಕೆ ಮೆರೆದಿದ್ದರು. ಬೆಳಗಾವಿ ನಗರ ಪಾಲಿಕೆ ಮುಂಭಾಗವಿರುವ ಕನ್ನಡ ಧ್ವಜಸ್ತಂಭ ತೆರವುಗೊಳಿಸಿ ಇಲ್ಲವೆ ಭಗವಾಧ್ವಜವನ್ನು ಹಾಕಿ ಎಂದು ಆಗ್ರಹಿಸಿದ್ದರು. ಅಲ್ಲದೆ ಬೆಳಗಾವಿ ಮಹಾರಾ಼ಟ್ರಕ್ಕೆ ಸೇರಿದ್ದು ಎಂಬ ಘೋಷಣೆಯನ್ನು ಸಹ ಕೂಗಿದ್ದರು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆ ಗಳು ಸಹ ಹೋರಾಟ ನಡೆಸಿದ್ದರು. ಇದೀಗ ಚಾಮರಾಜನಗರದಲ್ಲಿ ಸಹ ಆಕ್ರೋಶ ವ್ಯಕ್ತವಾಗಿದೆ.