ಬೆಂಗಳೂರು: ಹಿರಿಯ ನಾಯಕ ಜಗದೀಶ್ ಶೆಟ್ಟರ್ ನನಗೆ ತುಂಬಾ ಆತ್ಮೀಯರು. ಅವರ ಬಳಿ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗಲ್ಲ ಎಂಬ ಶೆಟ್ಟರ್ ಹೇಳಿಕೆಗೆ ಆರ್ಟಿ ನಗರ ನಿವಾಸದಲ್ಲಿ ಪ್ರತಿಕ್ರಿಯಿಸಿದ ಅವರು, ಈ ಕುರಿತು ನನಗೆ ಮಾಹಿತಿ ಇಲ್ಲ. ಅವರೊಂದಿಗೆ ನಾನು ಈ ಬಗ್ಗೆ ಮಾತುಕತೆ ನಡೆಸುತ್ತೇನೆ. ಶೆಟ್ಟರ್ ನನಗೆ ತುಂಬಾ ಆತ್ಮೀಯರಾಗಿದ್ದಾರೆ. ನಾಡಿದ್ದು ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.
ಶೆಟ್ಟರ್ ಹೇಳಿದ್ದೇನು..?
ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಶೆಟ್ಟರ್, ಈ ಬಾರಿಯ ಸಂಪುಟದಲ್ಲಿ ಸೇರ್ಪಡೆಯಾಗಬಾರದೆಂಬ ನಿರ್ಧಾರ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಈ ಹಿಂದೆ ಯಡಿಯೂರಪ್ಪನವರ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ಮಾಜಿ ಸಿಎಂ ಆಗಿದ್ದರೂ ಕಳೆದ ಬಾರಿ ಯಡಿಯೂರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದೆ. ಇದು ನನ್ನ ವೈಯಕ್ತಿಕ ನಿರ್ಧಾರವಾಗಿದ್ದು, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ನನ್ನ ಅಭಿಪ್ರಾಯವನ್ನು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಹೈಕಮಾಂಡ್ ಗೆ ತಂದಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಬೊಮ್ಮಾಯಿ ಸ್ವತಂತ್ರವಾಗಿ ಆಡಳಿತ ನಡೆಸೋದು ಸಾಧ್ಯನಾ?: ಸಿದ್ದರಾಮಯ್ಯ
ಹೊಸ ಸಿಎಂ ಬೊಮ್ಮಾಯಿ ಅವರ ಸಂಪುಟ ರಚನೆ ಪ್ರಕ್ರಿಯೆ ಆರಂಭಗೊಂಡಿದೆ. ಆದು ಯಾವಾಗಾ ಪೂರ್ಣಗೊಳ್ಳುತ್ತೋ ಗೊತ್ತಿಲ್ಲ. ನಾನೊಬ್ಬ ಹಿರಿಯ ನಾಯಕನಾಗಿದ್ದರಿಂದ ಬೊಮ್ಮಾಯಿ ಸಂಪುಟ ಸೇರ್ಪಡೆಯಾಗದಿರಲು ತೀರ್ಮಾನಿಸಿದ್ದೇನೆ. ಬೇರೆ ಯಾವ ಹುದ್ದೆಗೂ ನಾನು ಆಕಾಂಕ್ಷಿಯಲ್ಲ. ಒಂದು ವೇಳೆ ಪಕ್ಷದ ಹೈಕಮಾಂಡ್ ಯಾವುದಾದ್ರೂ ಕೆಲಸ ನೀಡಿದ್ರೆ ಮಾಡುತ್ತೇನೆ ಎಂದು ತಿಳಿಸಿದ್ದರು.