ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸ್ಯಾಂಡಲ್ವುಡ್ನ ಕಾರ್ಮಿಕರ ಬಗ್ಗೆ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಮನೆಯಲ್ಲಿ ಸಭೆ ನಡೆಯಲಿದೆ.
ಶಿವಣ್ಣನ ಮನೆಯಲ್ಲೇ ಸಭೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸ್ಯಾಂಡಲ್ವುಡ್ನ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತಿದೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅದರ ಸಂಸ್ಥೆಗಳು ಸಭೆಯಲ್ಲಿ ಭಾಗಿಯಾಗಲಿವೆ. ಇಂದು ಮಧ್ಯಾಹ್ನ ಸುಮಾರು 12:30ಕ್ಕೆ ನಾಗವಾರದ ಶಿವರಾಜ್ ಕುಮಾರ್ ಮನೆಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಕೊರೊನಾದಿಂದ ಕಳೆದ ನಾಲ್ಕು ತಿಂಗಳಿಂದ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ. ಇತ್ತ ಸರ್ಕಾರ ಎಲ್ಲಾ ವರ್ಗಕ್ಕೂ ಪ್ಯಾಕೇಜ್ ಘೋಷಿಸಿದೆ. ಆದರೆ ಚಿತ್ರರಂಗಕ್ಕೆ ಯಾವುದೇ ಪ್ಯಾಕೇಜ್ ಫೋಷಣೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದರ ಬಗ್ಗೆ ಅಸಮಾಧಾನ ಇದೆ. ಹೀಗಾಗಿ ಸಭೆಯಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
ಶಿವಣ್ಣನ ಮನೆಯಲ್ಲಿ ಸಭೆ ನಡೆದ ನಂತರ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನಿಡುವ ಸಾಧ್ಯತೆ ಇದೆ. ಸಭೆಯಲ್ಲಿ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಚಿತ್ರಮಂದಿರದ ಮಾಲೀಕರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.