ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಫೇಸ್ಬುಕ್ ನಲ್ಲಿ ಅವಾಚ್ಯ ಪದಗಳನ್ನು ಬಳಸಿ ನಿಂದನಾತ್ಮಕ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಪೆರ್ಡೂರಿನ ಅನಿಲ್ ಕುಮಾರ್ ಶೆಟ್ಟಿ ಎಂಬಾತನೇ ಸಚಿವರ ವಿರುದ್ಧ ನಿಂದನಾತ್ಮಕ ಪೋಸ್ಟ್ ಮಾಡಿದವ. ಬಿಲ್ಲವ ಈಡಿಗ ಉಪಪಂಗಡಗಳ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ 50 ಕೋಟಿ ರೂಗಳನ್ನು ಬಜೆಟ್ ನಲ್ಲಿ ಮೀಸಲಿಡುವಂತೆ ಕೋರಿ ಸಚಿವ ಶ್ರೀನಿವಾಸ್ ಪೂಜಾರಿ ಅವರು ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪವರಿಗೆ ಮನವಿ ಸಲ್ಲಿಸಿದ್ದರು. ಈ ಮನವಿ ಕೊಡುವ ಫೋಟೋ ಬಳಸಿಕೊಂಡು ಅನಿಲ್ ಕುಮಾರ್ ಶೆಟ್ಟಿ ಅವಾಚ್ಯ ಶಬ್ದಗಳನ್ನು ಬಳಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದಾನೆ.
ಬಿಲ್ಲವ ಸಮುದಾಯ ಮಂದಿ, ಕೋಟ ಬೆಂಬಲಿಗರು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಗಮನಿಸಿದ ಆರೋಪಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾನೆ. ಅದು ತನ್ನ ಫೇಸ್ ಬುಕ್ ಅಕೌಂಟ್ ನ್ನು ಯಾರೋ ಹ್ಯಾಕ್ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.