– ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ವಿಚಾರ
ಶಿವಮೊಗ್ಗ : ಸಿಡಿ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ, ಇದೀಗ ಮತ್ತೆ ಸಚಿವ ಸ್ಥಾನಕ್ಕೆ ಪ್ರಯತ್ನ ಪಟ್ಟರೆ ತಪ್ಪೇನಿದೆ? ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ ಎಂದು ಹೇಳುವ ಮೂಲಕ ಸಚಿವ ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಪಡುತ್ತಿರಬಹುದು. ಆದರೆ ಸಚಿವ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೋ, ಇಲ್ಲವೋ ಎಂಬುದು ಕೇಂದ್ರದ ನಾಯಕರು ಹಾಗೂ ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದಿದ್ದಾರೆ.
ರಾಜಕಾರಣಕ್ಕೆ ಸುಮ್ಮನೆ ಯಾರು ಬರುವುದಿಲ್ಲ. ರಾಜಕಾರಣಕ್ಕೆ ಬರುವುದೇ ಸ್ಥಾನ ಮಾನ ಪಡೆಯಲು. ರಾಜಕೀಯದಲ್ಲಿ ಯಾರೂ ಕೂಡ ಸನ್ಯಾಸಿಯಲ್ಲ. ಹೀಗಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಪಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.
ರಮೇಶ್ ಜಾರಕಿಹೊಳಿ ಸುತ್ತೂರು ಮಠಕ್ಕೆ ಭೇಟಿ ನೀಡಿರುವ ಹಿಂದೆ ಯಾವುದೇ ಉದ್ದೇಶ ಇಲ್ಲ. ಮಠಕ್ಕೆ ಯಾರೂ ಬೇಕಾದರೂ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಬಹುದು. ಸಚಿವ ಆಗುವುದಕ್ಕೆ ಅವರು ಮಠಕ್ಕೆ ಹೋಗಿಲ್ಲ. ಬದಲಿಗೆ ಸ್ವಾಮೀಜಿಯವರ ಆಶೀರ್ವಾದ ಪಡೆಯಲು ಹೋಗಿದ್ದಾರೆ. ಮಠಕ್ಕೆ ಹೋದರೆ ಸಚಿವ ಸ್ಥಾನ ಸಿಗುತ್ತದೆ ಎನ್ನುವುದಾದರೆ ಎಲ್ಲಾ ಮಠಗಳ ಮುಂದೆ ರಾಜಕಾರಣಿಗಳು ಸಾಲುಗಟ್ಟಿ ನಿಲ್ಲುತ್ತಿದ್ದರು ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ಕಟ್ಟ ಕಡೆಯ ವ್ಯಕ್ತಿಗೂ ಸೇವೆ ಸಿಗಬೇಕು ಅದೇ ರಾಜಕಾರಣ: ಎಂಟಿಬಿ