-ಬಲಗೊಳ್ಳುತ್ತಿದೆ ಅನಧಿಕೃತ ಸಂಘಿ ಸರ್ಕಾರ
ಬೆಂಗಳೂರು: ರಾಜ್ಯ ಸರ್ಕಾರ ಪಠ್ಯ ಪುಸ್ತಕಗಳನ್ನು ಕೇಸರೀಕರಣಗೊಳಿಸಿ ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಟ್ವೀಟ್ ಮೂಲಕ ಕಿಡಿಕಾರಿರುವ ಸಿದ್ದರಾಮಯ್ಯನವರು, ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ ದುರ್ಬಲಗೊಳ್ಳುತ್ತಿದೆ, ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಹರಿಹಾಯ್ದಿದ್ದಾರೆ.
10ನೇ ತರಗತಿ ಪಠ್ಯದಿಂದ ಕೆಲವು ಮಹಾಪುರುಷರಿಗೆ ಸಂಬಂಧಿಸಿದ ಪಾಠವನ್ನು ಕೈಬಿಟ್ಟದ್ದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪಠ್ಯಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ? ಅದನ್ನು ತಕ್ಷಣ ವಾಪಸು ಪಡೆಯಿರಿ, ಇಲ್ಲದೆ ಇದ್ದರೆ ನಿಮ್ಮ ಪಾತ್ರ ಒಪ್ಪಿಕೊಳ್ಳಿ. ಇದನ್ನೂ ಓದಿ: 7ನೇ ತರಗತಿಯಲ್ಲಿದ್ದ ಟಿಪ್ಪು ಸುಲ್ತಾನ್ ಪಠ್ಯವನ್ನು ಕೈ ಬಿಟ್ಟ ಸರ್ಕಾರ
ಕೊರೊನಾ ನಿಯಂತ್ರಿಸಲಾಗದ ರಾಜ್ಯಸರ್ಕಾರ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ. ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ, ಹೋರಾಟ ಅನಿವಾರ್ಯವಾಗಬಹುದು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಟಿಪ್ಪು ಸುಲ್ತಾನ್ ಪಠ್ಯವನ್ನ ಕೈ ಬಿಟ್ಟ ಸರ್ಕಾರಕ್ಕೆ ಶಾಸಕ ಅಪ್ಪಚ್ಚು ರಂಜನ್ ಧನ್ಯವಾದ