ಕಾರವಾರ: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ಮೇಲೆ ಪುಂಡರು ದಾಳಿ ಮಾಡಿದ ಪ್ರಕರಣವನ್ನು ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಯತ್ನದ ಮಾಡಿದ್ದ 20 ಜನರನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಶಿರಸಿ ನಗರದ ಕೆಲವು ಸಂಘಟನೆಯ ಪುಂಡರು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ವಾಟ್ಸಪ್ ಗ್ರೂಪ್ ಗಳಲ್ಲಿ ಧಾರ್ಮಿಕ ಮತ್ತು ಕೊಮು ಭಾವನೆಗಳಿಗೆ ಧಕ್ಕೆ ತರುವ ಮತ್ತು ಸಮಾಜದ ಶಾಂತಿ ಕದಡುವಂತಹ ಸಂದೇಶಗಳನ್ನು ಹರಿ ಬಿಟ್ಟಿದ್ದರು. ಮಾಹಿತಿ ಆಧಾರದ ಮೇಲೆ ಮುಂಜಾಗ್ರತಾ ಕ್ರಮವಾಗಿ 20 ಜನರನ್ನು ವಶಕ್ಕೆ ಪಡೆದು ಸಿ.ಪಿ.ಐ ಪ್ರದೀಪ್ ಬಿ.ಯು ಹಾಗೂ ಹೊಸ ಮಾರುಕಟ್ಟೆ ಠಾಣೆ ಪಿಎಸ್ಐ ನಾಗಪ್ಪ ಮತ್ತು ನಗರ ಠಾಣೆ ಪಿಎಸ್ಐ ಶಿವಾನಂದ ನಾವದಗಿ ಅವರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಸಂಶಯಾಸ್ಪದ ವ್ಯಕ್ತಿಗಳ ಮೇಲೆ ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಕೋಮು ಸೌಹಾರ್ದತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದು, ಪ್ರಚೋದನಾಕಾರಿ ಹೇಳಿಕೆ, ಸಂದೇಶ, ವಿಡಿಯೋ ಹರಿಬಿಟ್ಟಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿರಸಿ ಉಪವಿಭಾಗದ ಡಿವೈಎಸ್ಪಿ ಗೋಪಾಲ ಕೃಷ್ಣ ನಾಯಕ ಎಚ್ಚರಿಸಿದ್ದಾರೆ.